ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಭೈರಾಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ಭಯಾನಕ

ಟ್ಯಾಂಕ್ ಇದ್ದರೂ ಬಾರದ ನೀರು: ಶುದ್ಧ ನೀರಿನ ಘಟಕ ಬಂದ್
Last Updated 10 ಮೇ 2019, 7:19 IST
ಅಕ್ಷರ ಗಾತ್ರ

ಕೊಪ್ಪಳ: ನೀರಿನಲ್ಲಿಯೇ ಇದ್ದು ಬಾಯಾರಿ ಸತ್ತಂತೆ ಎಂಬ ಮಾತಿನಂತೆ ಪಕ್ಕದಲ್ಲಿ ತುಂಗಭದ್ರಾ ನದಿ ಇದ್ದು, ಕುಡಿಯುವ ನೀರಿಗೆ ಪರಿತಪಿಸುವಂತಹ ಸ್ಥಿತಿ ಗ್ರಾಮಸ್ಥರಿಗೆ ಎದುರಾಗಿದ್ದು, ಒಂದು ಕೊಡ ನೀರಿಗೆ ಊರ ತುಂಬೆಲ್ಲ ಅಲೆದಾಡುವ ಪರಿಸ್ಥಿತಿ ತಾಲ್ಲೂಕಿನ ಭೈರಾಪುರ ಗ್ರಾಮದಲ್ಲಿ ಇದೆ.

ಕುಡಿಯುವ ನೀರಿನ ಸಮಸ್ಯೆ ಹೇಳಿಕೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೂಡಾ ಜನರ ಕೈಗೆ ಸಿಗುತ್ತಿಲ್ಲ. ಗ್ರಾಮದಲ್ಲಿ ಓವರ್ ಹೆಡ್‌ ಟ್ಯಾಂಕ್ ಅನ್ನು 2014ರಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದಕೆ.ರಾಘವೇಂದ್ರ ಹಿಟ್ನಾಳ ಅವರು ನಿರ್ಮಿಸಿದ್ದರು. ನಂತರ ಎರಡು ಬಾರಿ ಅವರೇಶಾಸಕರಾಗಿದ್ದರೂ ಟ್ಯಾಂಕಿಗೆ ಮಾತ್ರ ನೀರು ಬಂದಿಲ್ಲ. ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.

ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಆರಂಭದಲ್ಲಿ ಚೆನ್ನಾಗಿ ನಡೆದು ನಂತರ ಬಂದ್ ಆಯಿತು. ಈಗ ಅದನ್ನು ಕೇಳುವವರು ಯಾರೂ ಇಲ್ಲದಾಗಿದೆ. ನಿರ್ವಹಣೆ ಸೇರಿದಂತೆ ಅನೇಕ ಸಮಸ್ಯೆಗಳು ಇದ್ದು, ಸಮಸ್ಯೆ ಪರಿಹಾರಕ್ಕೆ ಸ್ಥಳೀಯ ಆಡಳಿತ ಆಸಕ್ತಿ ತೋರಿಸುತ್ತಿಲ್ಲ. ಪರಿಣಾಮವಾಗಿ ಇರುವ ಒಂದೇ ಕೊಳವೆಬಾವಿಗೆ ಜನ ಮುಗಿ ಬಿದ್ದಿದ್ದಾರೆ.

ಬೋಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಭೈರಾಪುರದ ಜನತೆಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿ ಮನವಿ ಸಲ್ಲಿಸುವುದು, ಸಮಸ್ಯೆ ಹೇಳಿಕೊಳ್ಳಲು ಹೋಗೋಣ ಎಂದರೆ ಪಿಡಿಒ ಮಾತ್ರ ಸಿಗುವುದೇ ಇಲ್ಲ. ಅಪರೂಪಕ್ಕೊಮ್ಮೆ ಬರುತ್ತಾರೆ ಎಂಬುವುದು ಗ್ರಾಮಸ್ಥರ ಆರೋಪ.

212 ಸಮಸ್ಯಾತ್ಮಕ ಗ್ರಾಮ:ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 212 ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ. ಇಲ್ಲಿ ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಮೇವು, ಗೋಶಾಲೆ ಆಗಬೇಕಾಗಿದೆ. ಗ್ರಾಮಗಳಲ್ಲಿ ವಿವಿಧ ಸಮಸ್ಯೆಗಳಿರುವ ಬಗ್ಗೆ ಪಟ್ಟಿ ಮಾಡಲಾಗಿದ್ದು, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಾರೆ ಜಿಲ್ಲಾ ಪಂಚಾಯಿತಿ ಸಿಇಒ ಆರ್‌.ಎಸ್‌.ಪೆದ್ದಪ್ಪಯ್ಯ.

ಗೊಂದಲ

ಕುಡಿಯುವ ನೀರಿನ ಸಮಸ್ಯೆಪರಿಹಾರಕ್ಕೆ ಸ್ಥಳೀಯ ಪಂಚಾಯಿತಿ ಸದಸ್ಯರು ಆಸಕ್ತಿ ತೋರಿಸುತ್ತಿಲ್ಲ ಎಂಬುವುದು ಗ್ರಾಮಸ್ಥರ ಆರೋಪವಾಗಿದೆ. ಅಲ್ಲದೆ ಅಭಿವೃದ್ಧಿಗೆ ಮುಂದಾಗುವ ಬದಲು ತಮ್ಮ ವೈಯಕ್ತಿಯ ಪ್ರತಿಷ್ಠೆಯಿಂದ ನೀರಿನ ಕಾಮಗಾರಿಗೆ ಅಡೆತಡೆ ಉಂಟು ಮಾಡುತ್ತಿದ್ದಾರೆ. ಪಿಡಿಒ ಪಾರ್ವತಿ ಅವರು ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.

ತೀವ್ರ ಬರಗಾಲದ ಪ್ರದೇಶ ಮತ್ತು ಸತತ ನೀರಿನ ಸಮಸ್ಯೆ ಎದುರಿಸುತ್ತಿರುವ ಭೈರಾಪುರ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಕಲ್ಪಿಸಬೇಕು ಎಂಬುವುದು ಜನರ ಒತ್ತಾಯವಾಗಿದೆ. ಸಮೀಪದಲ್ಲಿ ನದಿ ಹರಿಯುತ್ತಿದ್ದರೂ ಇಚ್ಛಾಶಕ್ತಿ ಕೊರತೆಯಿಂದ ಜನ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT