ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ಸಾವಿರ ಮತಗಳ ಅಂತರದ ಗೆಲುವು: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಹೇಳಿಕೆ
Last Updated 3 ಏಪ್ರಿಲ್ 2021, 12:34 IST
ಅಕ್ಷರ ಗಾತ್ರ

ಕನಕಗಿರಿ: ‘ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ’ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್ ಅವರ ಮನೆಯಲ್ಲಿ ಶನಿವಾರ ಪತ್ರಕರ್ತರ ಜತೆಗೆ ಅವರು ಮಾತನಾಡಿದರು.

‘ಸಚಿವ ಬಿ. ಶ್ರೀರಾಮುಲು ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು ಚುನಾವಣಾ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳು ತಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಮುಂದಿನ ದಿನಗಳಲ್ಲಿ ತಾವು ಸಚಿವರಾಗುವುದು ಖಚಿತ. ಯಡಿಯೂರಪ್ಪವರು ಮಾತು ಕೊಟ್ಟಂತೆ ನಡೆದುಕೊಳ್ಳುತ್ತಾರೆ’ ಎಂದು ಹೇಳಿದರು.

‘ಶಾಸಕ ರಮೇಶ ಜಾರಕಿಹೊಳಿ ಅವರು ಪ್ರಚಾರದಲ್ಲಿ ಭಾಗವಹಿಸುವುದು ಅನುಮಾನ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ಯಡಿಯೂರಪ್ಪವರ ವಿರುದ್ದ ದೂರು ನೀಡಿರುವುದು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಬಿ.ವೈ. ವಿಜಯೇಂದ್ರ ವಿರುದ್ಧ ಪದೇ ಪದೇ ಟೀಕಿಸುತ್ತಿರುವುದು ಸರಿಯಲ್ಲ. ಪಕ್ಷದ ವೇದಿಕೆಯಲ್ಲಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.

ಶಾಸಕ ಬಸವರಾಜ ದಢೇಸೂಗೂರು ಮಾತನಾಡಿ,‘ಬಿ.ವೈ.ವಿಜಯೇಂದ್ರ ಅವರ ಹುಟ್ಟಿದ ನಕ್ಷತ್ರ ಚೆನ್ನಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಪ್ರತಿಯೊಂದು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಯತ್ನಾಳರ ಹೇಳಿಕೆಗೆ ಅರ್ಥವಿಲ್ಲ’ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್, ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ ಸೇರಿ ಜನಪ್ರತಿನಿಧಿಗಳು ಹಾಗೂ ಮುಖಂಡರು ಇದ್ದರು.

ಪ್ರತಾಪಗೌಡರು ಕನಕಾಚಲಪತಿ ಹಾಗೂ ಕರಡಿ ಗುಡ್ಡದ ಹನುಮಂತ ದೇವರ ದರ್ಶನ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT