ಕೊಪ್ಪಳ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 20ಕ್ಕೂ ಹೆಚ್ವು ಸ್ಥಾನಗಳನ್ನು ಗೆಲ್ಲಲಿದೆ. ಉತ್ತರ ಕರ್ನಾಟಕದ ಎಲ್ಲ 12 ಕ್ಷೇತ್ರಗಳಲ್ಲಿ ಕ್ಲೀನ್ ಸ್ವೀಪ್ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಭರವಸೆ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಪರ ಅಲೆಯಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಹರಡಿಸುತ್ತಿವೆ. ದೇಶದಾದ್ಯಂತ ಇರುವುದು ಇಂಡಿಯಾ ಅಲೆ ಎಂದರು.
ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದರಿಂದ ಇವು ಜನರ ಮನಸ್ಸಿನ ಮೇಲೆ ಪರಿಣಾಮ ಬೀರಿವೆ. ಇದು ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಗೆ ಕಾರಣವಾಗಲಿದೆ. ಪ್ರಚಾರಕ್ಕೆ ರಾಜ್ಯದಾದ್ಯಂತ ಓಡಾಡಿದ್ದದ್ದೇನೆ. ಎಲ್ಲ ಕಡೆಯೂ ಕಾಂಗ್ರೆಸ್ ಅಲೆ ಕಾಣುತ್ತಿದೆ.
ಗ್ಯಾರಂಟಿ ಯೋಜನೆಗಳಿಂದ ಇದೇ ಮೊದಲ ಬಾರಿಗೆ ಮಹಿಳೆಯರು ಯಾವುದೇ ಸಾಲ ಇಲ್ಲದೆ ಹಬ್ಬ ಆಚರಿಸಿದ್ದಾರೆ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನದಿಂದ ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಜನರ ಬಡತನ ನಿರ್ಮೂಲನೆ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ನಮ್ಮ ಅಭಿವೃದ್ಧಿಯ ಕರ್ನಾಟಕದ ಮಾದರಿ ಅನುಷ್ಠಾನ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು
ಮೋದಿ ಮಾತು ಭಾಷಣ ಸ್ಪರ್ಧೆ ರೀತಿಯಿದೆ. ಮೈಸೂರು, ಹಂಪಿ ಮತ್ತು ಬದಾಮಿಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ನೆರವಾಗುವುದಾಗಿ ಮೋದಿ ಹೇಳಿದ್ದಾರೆ. ಇದುವರೆಗೆ ಇವುಗಳ ಅಭಿವೃದ್ದಿಗೆ ನಯಾಪೈಸೆ ಕೊಡದವರು ಈಗ ಅವುಗಳ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಂಜನಾದ್ರಿಗೆ ರೂಪ್ ವೇ ಮಾಡಲು ಯೋಜನೆ ರೂಪಿಸಲಾಗಿದೆ. ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಕಾಣಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರಾದ ಸತೀಶ ಜಾರಕಿಹೊಳಿ, ಶಿವರಾಜ ತಂಗಡಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ, ಅಭ್ಯರ್ಥಿ ರಾಜಶೇಖರ ಹಿಟ್ನಾಳ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಪಾಲ್ಗೊಂಡಿದ್ದರು.