ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಮೇಲಿನ ಶೋಷಣೆ ನಿಲ್ಲಲಿ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ಮನವಿ
Last Updated 10 ಸೆಪ್ಟೆಂಬರ್ 2020, 16:51 IST
ಅಕ್ಷರ ಗಾತ್ರ

ಕೊಪ್ಪಳ: ಮಹಿಳೆಯರ ಮೇಲೆ ಅತ್ಯಾಚಾರ, ಬಲತ್ಕಾರ, ಗೃಹ ಬಂಧನ ಗಳಂತಹ ಹಲವಾರು ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿದ್ದು, ಈ ಕುರಿತು ಸಿಡಿಪಿಒ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದವರು ಸೇರಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಹಿಳಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಇಂದು ಆತ್ಮಹತ್ಯೆ ತಡೆಗಟ್ಟುವ ದಿನವಾಗಿದ್ದು, ಮಹಿಳೆಯರು ಹಲವಾರು ಶೋಷಣೆಗಳಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ರಾಜ್ಯದಲ್ಲಿ ಕಂಡುಬರುತ್ತಿವೆ. ಹಾಗಾಗಿ ಹೆಣ್ಣು ಮಕ್ಕಳು ಚೆನ್ನಾಗಿ ಓದಿ ಮುಂದೆ ಬರಬೇಕು. ಅದಕ್ಕಾಗಿಯೇ ಕೇಂದ್ರ ಸರ್ಕಾರವು ‘ಬೇಟಿ ಬಚಾವೋ, ಬೇಟಿ ಪಡಾವೋ’ದಂತಹ ಹಲವಾರು ಯೋಜನೆಗಳು ಮಹಿಳಾ
ಜಾಗೃತಿಗಾಗಿ ಜಾರಿಗೆ ತಂದಿದೆ ಎಂದು ಹೇಳಿದರು.

ಮಹಿಳೆಯರು ಜಾಗೃತರಾದಾಗ ಮಾತ್ರ ತಮ್ಮ ಮೇಲೆ ನಡೆಯುವ ಶೋಷಣೆಗಳಿಂದ ಮುಕ್ತರಾಗಬಹುದು. ವಿಶೇಷವಾಗಿ ಗ್ರಾಮೀಣ ಭಾಗದ ಅನಕ್ಷರಸ್ಥ ಮಹಿಳೆಯರು ಶೋಷಣೆಗೆ ಬಲಿಯಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಲಾಕ್‌ಡೌನ್ ಸಮಯದಲ್ಲಿ ಮಹಿಳೆಯರ ಮೇಲೆ ಶೋಷಣೆಯಾಗಿರುವುದರ ಕುರಿತು ಹಲವಾರು ದೂರುಗಳು ಬಂದಿವೆ. ಹಾಗಾಗಿ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರಿಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಪೊಲೀಸ‌ರಿಗೆ ರಾತ್ರಿ ಸಮಯದಲ್ಲಿ ಭದ್ರತೆ ಒದಗಿಸುವುದು ಅತ್ಯವಶ್ಯಕವಾಗಿದ್ದು, ಆದಷ್ಟು ಅವರಿಗೆ ರಾತ್ರಿ ವೇಳೆಯ ಕರ್ತವ್ಯಕ್ಕಿಂತ ಹಗಲಿನ ಕರ್ತವ್ಯಕ್ಕೆ ಆದ್ಯತೆ ನೀಡಬೇಕು ಎಂದು
ಸಭೆಯಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸ್ವಾಧಾರಗೃಹ ಮತ್ತು ಮಹಿಳಾ ಸಾಂತ್ವಾನ ಕೇಂದ್ರಗಳು ಇರಲೇಬೇಕು. ದೇವದಾಸಿ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೆ ಸರ್ಕಾರದಿಂದ ಸಿಗುವಎಲ್ಲ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT