ಗಂಗಾವತಿ: ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಗಮನಿಸಿದರೆ ಎರಡನೇ ಬೆಳೆಯಾಗಿ ರೈತರು ಭತ್ತ ಬೆಳೆದರೆ ಆರ್ಥಿಕವಾಗಿ ಹೊಡೆತ ಬೀಳಲಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಂಬಣ್ಣ ಐಲಿ ಆತಂಕ ವ್ಯಕ್ತಪಡಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೀರುಪಾಕ್ಷಿಗೌಡ ಮಾಲಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಮೊಹಮ್ಮದ್ ರಫಿ ಈ ಬಗ್ಗೆ
ಸ್ಪಷ್ಟ ಮಾಹಿತಿ ನೀಡುವಂತೆ ಕೋರಿದರು.
ಜಲಾಶಯದ ನೀರಿನ ಪ್ರಮಾಣ ಕಡಿಮೆ ಇದೆ. ಮಿತ ನೀರಾವರಿ ಬೆಳೆಗಳನ್ನು ಬೆಳೆಯುವ ಅಥವಾ ಬೆಳೆ ರಜೆ ನೀಡುವ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಜಂಬಣ್ಣ ಐಲಿ ಹೇಳಿದರು.
ಸಾಮಾನ್ಯ ಸಭೆಗೆ ಸತತ ಗೈರು ಹಾಜರಾದ ಅಧಿಕಾರಿಗಳ ಮೇಲೆ ಯಾವ ಕ್ರಮಕೈಗೊಂಡಿದ್ದೀರಿ ಎಂದು ತಾಲ್ಲೂಕು ಪಂಚಾಯಿತಿ ಇಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹಲವು ಸದಸ್ಯರು ಸಭಾತ್ಯಾಗಕ್ಕೆ ಮುಂದಾದರು.
ಇಒ ವಿನಾಯಕ ಅಗಸಿಮುಂದಿನ ಮಾತನಾಡಿ, ಸಭೆಯಲ್ಲಿ ಗೈರಾದ ಅಧಿಕಾರಿಗಳ ಮಾಹಿತಿ ಸಂಗ್ರಹಿಸಿ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಜರುಗಿಸಿಲ್ಲ ಎಂದರು. ಉಪಾಧ್ಯಕ್ಷ ಕನಕಪ್ಪ ನಾಯಕ್ ಹುಲಿಹೈದರ, ಸ್ಥಾಯಿಸಮಿತಿ ಅಧ್ಯಕ್ಷೆ ಸುನಿತಾ ರಾಮಕೃಷ್ಣ ಇದ್ದರು.