ಚನ್ನಪಟ್ಟಣ: ವಿದ್ಯಾರ್ಥಿ ದಿಸೆಯಲ್ಲಿಯೇ ಕಾನೂನು ಅರಿವು ಮುಖ್ಯ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹೊನ್ನಾಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಕಾನೂನು ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕಾನೂನು ತಿಳಿವಳಿಕೆ ಇದ್ದಾಗ ಮುಂದಿನ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯಚೆಟ್ಟಿ ಮಾತನಾಡಿ, ಕಾನೂನು ಸಾಕ್ಷರತೆ ಮೂಡಿಸಲು ನ್ಯಾಯಾಲಯವೇ ಗ್ರಾಮೀಣ ಪ್ರದೇಶಗಳಿಗೆ ಹಾಗೂ ಶಾಲೆಗಳಿಗೆ ತೆರಳುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಸಾರ್ವಜನಿಕರು ಪೊಲೀಸ್ ಠಾಣೆ ಹಾಗೂ ನ್ಯಾಯಾಲಯದ ಮೆಟ್ಟಿಲು ಹತ್ತುವುದನ್ನು ತಪ್ಪಿಸಲು ರಥಯಾತ್ರೆ ಕೈಗೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.
ಆರೋಗ್ಯ ಇಲಾಖೆ ದಕ್ಷಿಣಮೂರ್ತಿ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಮಾಹಿತಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಟಿ.ಅನ್ನಪೂರ್ಣೇಶ್ವರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಕೆ.ಎಸ್.ನಮ್ರತರಾವ್, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು, ಆರೋಗ್ಯ ಇಲಾಖೆ ಅನಿಲ್, ಹಿರಿಯ ವಕೀಲರಾದ ಲಕ್ಷ್ಮಣ್, ಸುರೇಶ್ ಹಾಗೂ ಶಾಲೆ ಶಿಕ್ಷಕರು ಇದ್ದರು.
ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಶು ಅಭಿವೃದ್ಧಿ ಇಲಾಖೆ, ತಾಲ್ಲೂಕು ಕಚೇರಿ, ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯ್ತಿ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.