ಮಂಡ್ಯ: ಜಿಲ್ಲೆಯಾದ್ಯಂತ ನಗರ ಹಾಗೂ ಗ್ರಾಮೀಣ ಭಾಗದ ಕಡಿಮೆ ಆದಾಯ ಹೊಂದಿರುವ ಬಡ ಕುಟುಂಬಗಳಿಗೆ ಸ್ವಂತ ಮನೆ ನೀಡಬೇಕು ಎಂದು ಒತ್ತಾಯಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ‘ಸ್ವಂತ ಮನೆ ನಮ್ಮ ಹಕ್ಕು ಸಂತ್ರಸ್ತರ ಒಕ್ಕೂಟ’ದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಜಿಲ್ಲೆಯಲ್ಲಿ ಸೂರು ಇಲ್ಲದವರಿಗೆ ಸಂವಿಧಾನ ಬದ್ಧವಾಗಿ ಸ್ವಂತ ಮನೆ ನಿರ್ಮಾಣ ಮಾಡಿಕೊಡುವಂತೆ ಹಲವು ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ವಸತಿ ರಹಿತರಿಗೆ ನಿವೇಶನ ಒದಗಿಸಲು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಫೆ.6ರ ರಾಜ್ಯ ಬಜೆಟ್ ಮುಂಚಿತವಾಗಿ ಸಭೆ ನಡೆಸಿ ಭೂಮಿ ಖರೀದಿಗೆ ಅಗತ್ಯ ಕ್ರಮ ಕೈಗೊಂಡು ಬಡವರಿಗೆ ನಿವೇಶನ ಒದಗಿಸಲಾಗುವುದು ಎಂದು ತಿಳಿಸಿದರು.
ಶಾಸಕ ಎಂ.ಶ್ರೀನಿವಾಸ್, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಪಂ ಸಿಇಒ ಕೆ.ಯಾಲಕ್ಕಿಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಇದ್ದರು.