ಮಳವಳ್ಳಿ: ತಾಲ್ಲೂಕಿನ ನೆಲ್ಲೂರು ಗ್ರಾಮದಲ್ಲಿರುವ ಅರಳಿಕಟ್ಟೆ ಕೆರೆಯ ನೂರಾರು ಮೀನುಗಳು ಮೃತಪಟ್ಟಿವೆ. ದುಷ್ಕರ್ಮಿಗಳು ಕೆರೆ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನೆಲಮಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಈ ಕೆರೆಯನ್ನು ಮೀನು ಸಾಕಾಣಿಕೆಗೆ ಗುತ್ತಿಗೆ ನೀಡಲಾಗಿದೆ. ಕಳೆದೆರಡು ದಿನದಿಂದ ಕೆರೆಯ ಸುತ್ತಲೂ ದುರ್ವಾಸನೆ ಇತ್ತು. ಸ್ಥಳೀಯರು ಸಮೀಪ ಹೋಗಿ ನೋಡಿದಾಗ ಮೀನುಗಳು ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಕೆರೆಯ ಸುತ್ತಲೂ ಕ್ರಿಮಿನಾಶಕದ ವಾಸನೆ ಬರುತ್ತಿದ್ದು ಮೀನುಗಳ ಸಾವಿಗೆ ಅದೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ತಾಲ್ಲೂಕು ವೈದ್ಯಾಧಿಕಾರಿ ವೀರಭದ್ರಪ್ಪ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಪೂಜಾಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆರೆಯ ನೀರನ್ನು ಜಾನುವಾರುಗಳಿಗೆ ಕುಡಿಸದಂತೆ ಎಚ್ಚರಿಕೆ ನೀಡಿದ್ದಾರೆ.
ಪ್ರಾಣಿ, ಪಕ್ಷಿಗಳು ನೀರು ಕುಡಿದು ಅನಾಹುತ ಸಂಭವಿಸುವ ಮೊದಲು ಕೆರೆಯ ಕಲುಷಿತ ನೀರನ್ನು ಹೊರಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದರು.