ಪಾಂಡವಪುರ: ಇಲ್ಲಿನ ರೈಲ್ವೆ ನಿಲ್ದಾಣದ ಮೇಲ್ಸೇತುವೆಯ ಪಾದಚಾರಿ ಮಾರ್ಗದ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು, ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ಎಂಜಿನಿಯರ್ ಬಿ.ಎಲ್.ವಸಂತ್ಕುಮಾರ್ (55) ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದರೆ.
ವಸಂತ್ಕುಮಾರ್ ತುರುವೇಕೆರೆ ತಾಲ್ಲೂಕಿನ ಬೆನಕನಕೆರೆ ಗ್ರಾಮದವರು.
ವಸಂತ್ಕುಮಾರ್ ಸೇರಿದಂತೆ ಕಾರ್ಖಾನೆಯ ನೌಕರರಿಗೆ 28 ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದ ಚಿಕಿತ್ಸೆ ಕೊಡಿಸಲು ಸಾಧ್ಯವಾಗಿಲ್ಲ. ಇವರ ಸಾವಿಗೆ ಪಿಎಸ್ಎಸ್ಕೆ ಆಡಳಿತ ಮಂಡಳಿಯೇ ಕಾರಣ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಹಾಗೂ ಪಿಎಸ್ಎಸ್ಕೆ ನೌಕರರುರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದರು.
ಬಾಕಿ ವೇತನ ವನ್ನು ಕೂಡಲೇ ನೀಡಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಬಂದ ಸಿಪಿಐ ರವೀಂದ್ರ ಪ್ರತಿಭಟನಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೂ ಪ್ರತಿಭಟನೆ ಮುಂದುವರಿಯಿತು. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಮೂರ್ತಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಯಿತು. ಕಾರ್ಖಾನೆಯಿಂದ ₹10 ಸಾವಿರ ತಾತ್ಕಾಲಿಕ ಪರಿಹಾರ ನೀಡಲಾಯಿತು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಹರವು ಪ್ರಕಾಶ್, ಕೆನ್ನಾನು ನಾಗರಾಜು, ಪಿಎಸ್ಎಸ್ಕೆ ನೌಕರರ ಸಂಘದ ಅಧ್ಯಕ್ಷ ರಾಜಶೇಖರ್, ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಅಧ್ಯಕ್ಷ ಸತೀಶ್ ಇದ್ದರು.