ಮಂಡ್ಯ: ನಟ ದರ್ಶನ್ ತೂಗುದೀಪ ಅವರು ಸಿನಿಮಾ ಕ್ಷೇತ್ರಕ್ಕೆ ಬಂದು 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಜ.17ರಂದು ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಾಲಯದ ಮೈದಾನದಲ್ಲಿ ಅದ್ಧೂರಿಯಾಗಿ ‘ಡಿ ಬಾಸ್; 25 ಬೆಳ್ಳಿ ಪರ್ವ’ ಕಾರ್ಯಕ್ರಮ ಆಯೋಜಿಸಲಾಗಿದೆ.
ದರ್ಶನ್ ಅಭಿಮಾನಿಗಳ ಬಳಗ ಆಯೋಜಿಸಿರುವ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಚಂದ್ರವನ ಆಶ್ರಮದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಚಿಕ್ಕಮಗಳೂರು ಗೌರಿಗದ್ದೆ ವಿನಯ್ ಗುರೂಜಿ ಸಾನ್ನಿಧ್ಯ ವಹಿಸುವರು.
ಸಂಜೆ 5 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಚಲನಚಿತ್ರ ಹಿನ್ನೆಲೆ ಗಾಯಕ, ಗಾಯಕಿಯರು ಪಾಲ್ಗೊಳ್ಳುವರು. ದರ್ಶನ್ ಅಭಿನಯದ ಚಿತ್ರಗಳ ಗೀತೆಗಳಿಗೆ ಕಲಾವಿದರು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.
ಸಂಸದೆ ಸುಮಲತಾ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ 25 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದ್ದು ಸುಮಾರು 40 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ದರ್ಶನ್ ಅಭಿಮಾನಿಗಳು ತಿಳಿಸಿದ್ದಾರೆ.