ಶ್ರೀರಂಗಪಟ್ಟಣ: ‘ಮಂಡ್ಯ ಜಿಲ್ಲೆಯಲ್ಲಿ ಅಗ್ರಿ ಟೂರಿಸಂ ಯೋಜನೆ ರೂಪಿಸುವ ಬಗ್ಗೆ ಚಿಂತನೆ ನಡೆಯುತ್ತಿದ್ದು ಆ ಮೂಲಕ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರಮುಖ ಆದ್ಯತೆ ನೀಡಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ತಾಲ್ಲೂಕಿನ ಕೆಆರ್ಎಸ್ನಲ್ಲಿ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
‘ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ, ಇಲ್ಲಿನ ಬೆಳೆ ವೈವಿಧ್ಯ, ಕೃಷಿ ಪದ್ಧತಿ, ನೀರಾವರಿ ವ್ಯವಸ್ಥೆಯನ್ನು ಪ್ರವಾಸಿಗರಿಗೆ ತಿಳಿಸಿಕೊಡಲು ಅಗ್ರಿ ಟೂರಿಸಂ ಯೋಜನೆ ರೂಪಿಸುವ ಉದ್ದೇಶ ಇದೆ. ಇದರಿಂದ ಇಲಾಖೆಗೆ ಆದಾಯವೂ ಬರಲಿದೆ’ ಎಂದು ಹೇಳಿದರು.
‘ಮಂಡ್ಯ ಜಿಲ್ಲೆಯ ವಿವಿಧೆಡೆ ಪ್ರವಾಸೋದ್ಯ ಇಲಾಖೆಯ ₹100 ಕೋಟಿ ಅನುದಾನದ, 71 ಯೋಜನೆಗಳು ಪ್ರಗತಿಯಲ್ಲಿದ್ದು, ಕೆಲಸ ಪೂರ್ಣಗೊಳಿಸಿದರೆ ಮತ್ತಷ್ಟು ಅನುದಾನ ಬಿಡುಗಡೆ ಮಾಡಲಾಗುವುದು.’ ಎಂದು ಸಚಿವರು ಭರವಸೆ ನೀಡಿದರು.
ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಮೋತಿಲಾಲ್, ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ. ರೂಪಾ, ಕಾವೇರಿ ನೀರಾವರಿ ನಿಗಮದ ಇಇ ಎಂ.ಬಿ. ರಾಜು, ಎಇಇ ವಾಸುದೇವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
‘ಡಿಸ್ನಿಲ್ಯಾಂಡ್’ ಯೋಜನೆ ಜಾರಿ ಕಷ್ಟ
‘ಕೆಆರ್ಎಸ್ನಲ್ಲಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಮನರಂಜನಾ ಪಾರ್ಕ್ ಸ್ಥಾಪನೆ ಸಂಬಂಧ ಈ ಹಿಂದಿನ ಸರ್ಕಾರ ರೂಪಿಸಿದ್ದ ಯೋಜನೆಯನ್ನು ಯಥಾವತ್ ರೂಪಿಸುವುದು ಕಷ್ಟ. ಪ್ರವಾಸಿಗರನ್ನು ಆಕರ್ಷಿಸಲು ಕಡಿಮೆ ವೆಚ್ಚದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬೃಂದಾವನಕ್ಕೆ ಮತ್ತಷ್ಟು ಆಕರ್ಷಕ ರೂಪ ನೀಡಲಾಗುವುದು. ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಯೋಜನೆಗಳಿಗೆ ಒತ್ತು ನೀಡಲಾಗುವುದು’ ಎಂದು ಯೋಗೇಶ್ವರ್ ಹೇಳಿದರು.