ಮಂಡ್ಯ: ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ (ಎಡಿ) ಹಾಗೂ ಕೃಷಿ ಅಧಿಕಾರಿ (ಎಒ)ಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಜಿಲ್ಲೆಯ 7 ತಾಲ್ಲೂಕುಗಳ 7 ಸಹಾಯಕ ಕೃಷಿ ನಿರ್ದೇಶಕರ ಹೆಸರಿನಲ್ಲಿ ಪತ್ರ ಬರೆದು, ಅವರ ನಕಲಿ ಸಹಿ ಮಾಡಿ ಮೈಸೂರಿನ ಸರಸ್ವತಿಪುರಂ ಅಂಚೆ ಕಚೇರಿ ಮೂಲಕ ರಾಜ್ಯಪಾಲರಿಗೆ ಪತ್ರ ಕಳುಹಿಸಿರುವುದು ಪತ್ತೆಯಾಗಿತ್ತು. ಈ ವಿಚಾರದಲ್ಲಿ ಕೆ.ಆರ್.ನಗರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್ ಅವರನ್ನು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿದೆ.
ಭಾನುವಾರ ಬೆಳಿಗ್ಗೆ ಕೆ.ಆರ್.ನಗರದ ಕೃಷಿ ಇಲಾಖೆಗೆ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳು ಗುರುಪ್ರಸಾದ್ ಹಾಗೂ ಸುದರ್ಶನ್ ಅವರನ್ನು ವಶಕ್ಕೆ ಪಡೆದರು. ಕಚೇರಿಯಲ್ಲಿದ್ದ ಕೆಲವು ದಾಖಲಾತಿಗಳನ್ನು ವಶಕ್ಕೆ ಪಡೆದರು.
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ನಕಲಿ ಪತ್ರ ಬರೆಯಲು ಅಧಿಕಾರಿಗಳಿಗೆ ರಾಜಕೀಯ ಒತ್ತಡ ಇತ್ತೇ ಎಂಬ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಸಿಐಡಿ ಡಿವೈಎಸ್ಪಿ ಕರೆ ಮಾಡಿ ನಮ್ಮ ಇಲಾಖೆ ಅಧಿಕಾರಿಗಳನ್ನು ವಶಕ್ಕೆ ಪಡೆದ ಮಾಹಿತಿ ನೀಡಿದ್ದಾರೆ. ಜೊತೆಗೆ ಕಚೇರಿಯಲ್ಲಿ ತಪಾಸಣೆ ನಡೆಸಿದ ವಿಚಾರವನ್ನೂ ನನ್ನ ಗಮನಕ್ಕೆ ತಂದಿದ್ದಾರೆ’ ಎಂದು ಮೈಸೂರು ಜಿಲ್ಲೆ ಕೃಷಿ ಜಂಟಿ ನಿರ್ದೇಶಕ ಬಿ.ಎಸ್.ಚಂದ್ರಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.
ಈ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ‘ಮೈಸೂರು ಜಿಲ್ಲೆಯ ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ವಿಷಯ ನನಗೆ ಗೊತ್ತಿಲ್ಲ. ಈ ವಿಚಾರವಾಗಿ ಸಿಐಡಿ ಇನ್ನೂ ಸರ್ಕಾರಕ್ಕೆ ವರದಿ ನೀಡಿಲ್ಲ. ಮಂಡ್ಯ ಜಿಲ್ಲೆಯ ಅಧಿಕಾರಿಗಳ ಹೆಸರಿನಲ್ಲಿ ಏಕೆ ಪತ್ರ ಬರೆದರು ಎಂಬ ವಿಷಯ ಗೊತ್ತಾಗಬೇಕು, ಪತ್ರ ಬರೆಯಲು ಪ್ರಚೋದನೆ ಇತ್ತಾ ಎಂಬ ಬಗ್ಗೆಯೂ ತಿಳಿಯಬೇಕಿದೆ’ ಎಂದು ಹೇಳಿದರು.