ಕೊಪ್ಪ: ಹೋಬಳಿಯ ಬೆಸಗರಹಳ್ಳಿ ಬಸ್ ನಿಲ್ದಾಣದ ಕಾಮಗಾರಿಯನ್ನು ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಗುರುವಾರ ಪುನರಾರಂಭಿಸಲಾಯಿತು.
ಕೆಎಸ್ಆರ್ಟಿಸಿಯು 15X50 ಅಡಿ ವಿಸ್ತೀರ್ಣದಲ್ಲಿ ₹75 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸುತ್ತಿದೆ.
ಇದೇ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸಲು 2017ರಲ್ಲೇ ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ, ಈ ಜಾಗವು ಸಹಕಾರ ಸಂಘಕ್ಕೆ ಸೇರಿದ್ದು ಎಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಇದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಸಾರ್ವಜನಿಕ ಉದ್ದೇಶಕ್ಕಾಗಿ ಇದೇ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತೆ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಹೀಗಾಗಿ, ಕೆಎಸ್ಆರ್ಟಿಸಿ ಅಧಿಕಾರಿಗಳು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.
ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ್ದಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ‘ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದಾಗ ಬಸ್ ನಿಲ್ದಾಣಕ್ಕೆ ಅನುದಾನ ತಂದು ಭೂಮಿಪೂಜೆ ಮಾಡಿಸಿದ್ದೆ. ಕೆಲ ಕಾನೂನು ತೊಡಕುಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಕಾಮಗಾರಿ ಪ್ರಾರಂಭವಾಗಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಹೆಚ್ಚುವರಿ ಕಾಮಗಾರಿಗೆ ದರಪಟ್ಟಿ ತಯಾರಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
ಬಸ್ ನಿಲ್ದಾಣದ ಸುತ್ತಲೂ ಇರುವ ಅಂಗಡಿಗಳ ಮುಂದೆ ಹಾಕಿಕೊಂಡಿರುವ ಶೀಟ್ ಮತ್ತು ಇತರ ವಸ್ತುಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಡಿ.ಸಿ.ತಮ್ಮಣ್ಣ ಅವರು ತಾ.ಪಂ ಇಒ ಮುನಿರಾಜು ಮತ್ತು ಪಿಡಿಒ ಪ್ರಕಾಶ್ ಅವರಿಗೆ ಸೂಚಿಸಿದರು.
ಸ್ಥಳದಲ್ಲಿ ನೂರಾರು ಪೊಲೀಸರು ಮತ್ತು ಮೀಸಲು ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಜಯ್ ಕುಮಾರ್, ತಾ.ಪಂ. ಇಒ ಮುನಿರಾಜು, ಸಿಪಿಐ ಪ್ರಸಾದ್, ಸಾರಿಗೆ ಇಲಾಖೆಯ ಅಧಿಕಾರಿಗಳಾದ ನಾಗರಾಜಮೂರ್ತಿ, ಮಲ್ಲೇಶ್, ಗಣೇಶ್, ಮಮತಾ, ಉಪ ತಹಶೀಲ್ದಾರ್ ಎನ್. ಮಂಜುನಾಥ್, ಕಂದಾಯ ನಿರೀಕ್ಷಕ ಅರವಿಂದ, ಗ್ರಾಮ ಲೆಕ್ಕಾಧಿಕಾರಿ ಎಂ.ಎಚ್. ಸಿದ್ದೇಗೌಡ, ಪಿಡಿಒ ಪ್ರಕಾಶ್ ಇದ್ದರು.