ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳವಾರ ತಡರಾತ್ರಿ ನಿಧನರಾದರು.
ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಂತರ ಜನತಾ ಪಕ್ಷ ಸೇರ್ಪಡೆಯಾಗಿದ್ದರು.
1998ರಿಂದ 2004ರವರೆಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಜನತಾ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಯಾಗಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾಗಿಯೂ ದುಡಿದಿದ್ದರು.
2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2012ರವರೆಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಇಂಡುವಾಳು ಗ್ರಾಮದ ಜಮೀನಿನಲ್ಲಿ ಬುಧವಾರ ಅವರ ಅಂತ್ಯಕ್ರಿಯೆ ನೆರವೇರಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.