ಮಳವಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ರಕ್ತ ಸಹಿ ಚಳುವಳಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ರವಾನಿಸಿದರು.
ಪಟ್ಟಣದ ಕನ್ನಡ ಭವನದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಮಹೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು. ನಂತರ ಮಾತನಾಡಿ, ‘ಅತಿಥಿ ಶಿಕ್ಷಕರೇ ಎಲ್ಲ ಜವಾಬ್ದಾರಿ ನಿರ್ವಹಿಸಿ ಉತ್ತಮ ಫಲಿತಾಂಶ ನೀಡಿರುವ ನೂರಾರು ಶಾಲೆಗಳಿವೆ, ನಮ್ಮ ದುಡಿಮೆಗೆ ಬೆಲೆ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಿಲ್ಲ. ಫೆಬ್ರುವರಿ 16ರ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳ ಬಗ್ಗೆ ಗಮನ ನೀಡಬೇಕು’ ಎಂದು ಮನವಿ ಮಾಡಿದರು.