ಮಂಡ್ಯ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವು 53 ಸಾವಿರ ಕ್ಯುಸೆಕ್ ದಾಟಿದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದ್ದು ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.
ಜಲಾಶಯ ಗರಿಷ್ಠ ಮಟ್ಟ ತಲುಪಿದ್ದು ಬಂದ ನೀರನ್ನು ನದಿ ಹಾಗೂ ನಾಲೆಗಳಿಗೆ ಹರಿಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ವಿವಿಧೆಡೆ ನದಿ ತೀರದ ಜಮೀನು ಮುಳುಗಿವೆ. ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ನಾಲ್ಕು ದಿನಗಳ ಹಿಂದೆಯೇ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ.
ಶುಕ್ರವಾರ ಸಂಜೆಯ ವೇಳೆಗೆ 53,016 ಕ್ಯುಸೆಕ್ ಒಳಹರಿವು, 52,807 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು. ಹೊರ ಹರಿವಿನಲ್ಲಿ 2,508 ಕ್ಯುಸೆಕ್ ನೀರು ನಾಲೆಗೆ ಹರಿಸಲಾಗುತ್ತಿದೆ.
‘ನದಿಗೆ ಒಂದು ಲಕ್ಷ ಕ್ಯುಸೆಕ್ ನೀರು ಹರಿಸಿದರೂ ಯವುದೇ ತೊಂದರೆಯಾಗುವುದಿಲ್ಲ. ಅಷ್ಟು ಪ್ರಮಾಣದ ನೀರು ಹರಿಯುವ ನದಿ ಪಾತ್ರವಿದೆ. ಆದರೂ ನದಿ ತೀರದ ಗ್ರಾಮಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದರು.