ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಮೈಸೂರು ಭಾಗದ ಜಿಲ್ಲೆಗಳಲ್ಲಿ ಭಾನುವಾರವೂ ಪ್ರತಿಭಟನೆ ಸರಣಿ ಮುಂದುವರಿಯಿತು. ಮಂಡ್ಯ ಜಿಲ್ಲೆಯ ಮಳವಳ್ಳಿ, ಮದ್ದೂರಿನಲ್ಲಿ 26ರಂದು ಬಂದ್ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.
ಬೆಂಗಳೂರಿನ ಕಾವೇರಿ ನದಿ ನೀರಿನ ರಕ್ಷಣಾ ಹೋರಾಟ ಸಮಿತಿ ಮತ್ತು ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಕಾರ್ಯಕರ್ತರು ಮಂಡ್ಯದ ಜೆ.ಸಿ.ವೃತ್ತದ ಹೆದ್ದಾರಿಯಲ್ಲಿ ಮಲಗಿ ಪ್ರತಿಭಟಿಸಿದ್ದು, ‘ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು. ವೇದಿಕೆ ಸಂಸ್ಥಾಪಕ ಗಿರೀಶ್ ಶಿವಾರ್ಚಕ ನೇತೃತ್ವದಲ್ಲಿ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಬೆಂಬಲ ಸೂಚಿಸಿದರು.
ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರೈತ ಹಿತರಕ್ಷಣಾ ಸಮಿತಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತ
ಪಡಿಸಿದರು. ‘ಒಕ್ಕೂಟದಲ್ಲಿರುವುದೇ ಸಂಕಷ್ಟ ತಂದೊಡ್ಡಿದೆ. ಪ್ರಧಾನಿ ಮೌನ ವಹಿಸಿದ್ದು, ಒಕ್ಕೂಟ ವ್ಯವಸ್ಥೆಗೆ ಅರ್ಥವಿದೆಯೇ’ ಎಂದು ಪ್ರಶ್ನಿಸಿದರು.
‘ಕಾವೇರಿ ನೀರಿನ ವಿಚಾರದಲ್ಲಿ ಸಂಕಷ್ಟ ಸೂತ್ರಕ್ಕೆ ಎಲ್ಲ ರಾಜ್ಯಗಳು ಸಮ್ಮತಿಸಬೇಕು. ರಾಜ್ಯದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಒಂದೂವರೆ ತಿಂಗಳು ಕಳೆದರೆ ನಮ್ಮ ಭಾಗದ ರೈತರ ಕಷ್ಟ ಹೇಳತೀರದಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.
ಶ್ರೀರಂಗಪಟ್ಟಣದಲ್ಲಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು ಬೆಂಗಳೂರು ಮೈಸೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ತಮಿಳುನಾಡು ಲಾರಿಗೆ ತಡೆ, ಬಾರುಕೋಲು ಚಳವಳಿ ನಡೆಸಿ ಆಕ್ರೋಶ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಭಾನುವಾರ ಇಲ್ಲಿ ಬಾರು ಕೋಲು ಚಳವಳಿ ನಡೆಸಿದರು. ಚಾಮರಾಜೇಶ್ವರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದರು. ತಮಿಳುನಾಡು ನೋಂದಣಿಯ ಸರಕು ಸಾಗಣೆಯ ಲಾರಿ ತಡೆದು ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಎಸ್ಡಿಪಿಐ ಕಾರ್ಯಕರ್ತರು ರೈತ ಸಂಘದ ಸದಸ್ಯರು ಪ್ರತಿಭಟಿಸಿದರು. ಹಾಸನ: ಇಂದು ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಸನ: ‘ತಮಿಳುನಾಡಿಗೆ ನೀರು ಹರಿಸಿರುವುದನ್ನು ವಿರೋಧಿಸಿ ಸೆ.25ರ ಬೆಳಿಗ್ಗೆ 10.30ಕ್ಕೆ ಗೊರೂರಿನ ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಲಿಂಗೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ‘ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ಕಣಿವೆಯ ರೈತರಿಗೆ ಸಂಕಷ್ಟವಿದ್ದು ಈಗ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿರುವುದು ಸರಿಯಲ್ಲ’ ಎಂದು ಪ್ರತಿಪಾದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.