ಮಂಡ್ಯ: ‘ದಶಪಥ ಹೆದ್ದಾರಿ ಕಾಮಗಾರಿ ಪೂರ್ಣವಾಗದೇ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ‘ಗೋ ಬ್ಯಾಕ್ ಮೋದಿಜಿ’ ಪ್ರತಿಭಟನೆ ನಡೆಸಲಾಗುವುದು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಎಚ್ಚರಿಸಿದರು.
‘ದಶಪಥ ಹಾಗೂ ಜಿಲ್ಲಾ ಕೇಂದ್ರಗಳಿಗೆ ಇಲ್ಲಿವರೆಗೂ ಸಂಪರ್ಕ ರಸ್ತೆ ನಿರ್ಮಿಸಿಲ್ಲ. ಸರ್ವೀಸ್ ರಸ್ತೆಗಳೂ ಪೂರ್ಣಗೊಂಡಿಲ್ಲ. ಹಲವೆಡೆ ಸೇತುವೆ ಕಾಮಗಾರಿ ಮುಗಿದಿಲ್ಲ. ಆದರೂ ಚುನಾವಣಾ ಲಾಭಕ್ಕಾಗಿ ಉದ್ಘಾಟನೆ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಪ್ರಧಾನಿ ಭೇಟಿ ದಿನ ಕಪ್ಪು ಬಾವುಟ ಪ್ರದರ್ಶಿಸಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಪ್ರಧಾನಿ ಭೇಟಿ ಅಂಗವಾಗಿ ನಗರದ ವಿವಿಧೆಡೆ ಹಾಕಿದ್ದ ಕಾಂಗ್ರೆಸ್ ಗ್ಯಾರಂಟಿ ಪ್ರಚಾರ ಸಾಮಗ್ರಿಯನ್ನು ತೆರವುಗೊಳಿಸಲಾಗಿದೆ. ಇದಕ್ಕೆ ಜೆಡಿಎಸ್ನವರೂ ಬೆಂಬಲ ಕೊಟ್ಟಿರುವುದು ಖಂಡನೀಯ. ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯ ಜಿಲ್ಲೆಗೆ ಬರುವುದನ್ನು ಸ್ವಾಗತಿಸುತ್ತೇವೆ. ಆದರೆ, ರಾಜಕಾರಣಕ್ಕಾಗಿ ಆಗಮಿಸುತ್ತಿರುವುದನ್ನು ವಿರೋಧಿಸುತ್ತೇವೆ’ ಎಂದರು.
‘ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ರೈತರ ಸಾಲ ಮಾಡುವುದನ್ನು ಲೋಕಸಭೆಯಲ್ಲಿ ವಿರೋಧಿಸಿದ್ದಾರೆ. ಅನ್ನದಾತರ ಕಷ್ಟಗಳಿಗೆ ನರವಾಗುವುದು ಸರ್ಕಾರದ ಕರ್ತವ್ಯವಾಗಬೇಕು. ಆದರೆ ಯುವ ಸಂಸದನಿಗೆ ರೈತರ ಕಷ್ಟ ಗೊತ್ತಿಲ್ಲ’ ಎಂದರು.
‘ಮಂಡ್ಯ ನಗರದ ಹೃದಯ ಭಾಗದಲ್ಲಿ 100ಕ್ಕೂ ಹೆಚ್ಚು ದಿನಗಳ ಕಾಲ ರೈತರು ಪ್ರತಿಭಟನೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಕಬ್ಬು ಬೆಳೆಗಾರರಿಗೆ ಯಾವುದೇ ಭರವಸೆ ನೀಡಿಲ್ಲ. ಕರಾಳ ಕೃಷಿ ಕಾಯ್ದೆಗಳನ್ನು ರಾಜ್ಯ ಬಿಜೆಪಿ ಸರ್ಕಾರ ಇಲ್ಲಿಯವರೆಗೆ ಹಿಂಪಡೆದಿಲ್ಲ. ಇವೆಲ್ಲವನ್ನು ಖಂಡಿಸಿ ಪ್ರಧಾನಿ ಭೇಟಿ ದಿನ ಹೋರಾಟ ನಡೆಸಲಾಗುವುದು’ ಎಂದರು.
ಮುಖಂಡರಾದ ಕೆ.ಕೆ.ರಾಧಾಕೃಷ್ಣ, ಕೃಷ್ಣ, ಶ್ರೀಧರ್, ಅಪ್ಪಾಜಿ, ವಿಜಯ್ಕುಮಾರ್, ಹೀನಾ ಕೌಸರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.