ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗೇಟ್ ಬಳಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ 50 ಹಾಸಿಗೆಗೆಳ ಕೋವಿಡ್ ಕೇರ್ ಕೇಂದ್ರವನ್ನು ಆರಂಭಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಗುರುವಾರ ಈ ಕೇಂದ್ರವನ್ನು ಉದ್ಘಾಟಿಸಿದರು.
ಸಚಿವರ ಕೋರಿಕೆ ಮೇರೆಗೆ ಧರ್ಮಸ್ಥಳ ಸಂಸ್ಥೆ ತನ್ನ ಕಟ್ಟಡವನ್ನು ಕೋವಿಡ್ ಕೇಂದ್ರಕ್ಕೆ ಬಿಟ್ಟು ಕೊಟ್ಟಿದೆ. ಪ್ರಥಮ ಹಂತದ ಸೋಂಕಿತರನ್ನು ಈ ಕೇಂದ್ರಕ್ಕೆ ದಾಖಲಿಸಿಕೊಳ್ಳಲಾಗುತ್ತದೆ. ಇಲ್ಲಿ ದಾಖಲಾಗುವವರಿಗೆ ಊಟ, ವಸತಿಯನ್ನು ಧರ್ಮಸ್ಥಳ ಸಂಸ್ಥೆಯೇ ಕಲ್ಪಿಸಲಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಪ್ರಾಣಾಯಾಮವನ್ನೂ ಹೇಳಿಕೊಡಲಾಗುತ್ತದೆ ಎಂದು ಸಂಸ್ಥೆಯ ಮೈಸೂರು ಪ್ರಾದೇಶಿಕ ನಿರ್ದೇಶಕ ಪಿ.ಗಂಗಾಧರ ರೈ ತಿಳಿಸಿದರು.
ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ‘ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು, ಜನರು ಸಂಕಷ್ಟದಲ್ಲಿರುವ ಸಮಯದಲ್ಲಿ ಸ್ಪಂದಿಸಿದ್ದಾರೆ. ಅವರ ಸೇವೆ ಇತರರಿಗೆ ಮಾದರಿಯಾಗಿದೆ. ಉತ್ತಮ ಗಾಳಿ, ಬೆಳಕು ಇರುವ ಕಟ್ಟಡವನ್ನೇ ಬಿಟ್ಟು ಕೊಟ್ಟಿದ್ದಾರೆ. ಈ ಕೋವಿಡ್ ಕೇಂದ್ರಕ್ಕೆ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ಶೀಘ್ರ ನಿಯೋಜಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.
ಶಾಸಕ ರವೀಂದ್ರ ಶ್ರೀಕಂಠಯ್ಯ ಧರ್ಮಸ್ಥಳ ಸಂಸ್ಥೆಯ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಟಿ.ಶ್ರೀಧರ್, ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪಾ, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಮುರಳೀಧರ್, ಯೋಜನಾಧಿಕಾರಿಗಳಾದ ಕೆ.ಪ್ರಸಾದ್, ಪಿ. ಸಾವಿತ್ರಿ, ಎನ್.ಭಾಸ್ಕರ್, ವಿಶಾಲ ಅಕ್ಕಿ ಇದ್ದರು.