ಮಂಡ್ಯ: ಕಾರ್ಖಾನೆ ಕಾಯ್ದೆಗೆ ತಿದ್ದುಪಡಿಯಿಂದ ಲಕ್ಷಾಂತರ ಕಾರ್ಮಿಕರಿಗೆ ತೊಂದರೆಯಾಗಿದೆ. ಕಾರ್ಮಿಕ ವಿರೋಧಿಯಾದ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕರು, ಸಿಐಟಿಯು ಕಾರ್ಯಕರ್ತರು ನಗರದ ಜೆಸಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಮದ್ದೂರಿನ ಪವರ್ ಶೆಲ್ ಬ್ಯಾಟರಿ ಕಾರ್ಮಿಕರ ಸಂಘ, ಸನ್ವ ಡೈಮಂಡ್ ಟೂಲ್ಸ್ ಕಾರ್ಮಿಕರ ಸಂಘದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಬಳಿಯೂ ಪ್ರತಿಭಟನೆ ನಡೆಸಿದರು.
1948ರ ಕಾಯ್ದೆಯಂತೆ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮ ನೀಡಬೇಕೆಂದು ಹೇಳುತ್ತದೆ. ಆದರೆ, ಈ ತಿದ್ದುಪಡಿ ವಿಧೇಯಕದಲ್ಲಿ ಯಾವುದೇ ವಿರಾಮವಿಲ್ಲದೆ ದುಡಿಯುವಂತೆ ತಿದ್ದುಪಡಿ ಮಾಡಲಾಗಿದೆ. ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಲಾಗಿದೆ. ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಕಾರ್ಮಿಕರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಉದ್ಯೋಗ ಕಡಿತ, ಕಡಿಮೆ ವೇತನಕ್ಕೆ ದುಡಿಮೆ, ಅಧಿಕ ಉತ್ಪಾದನೆ ಮಾಡಿಸಿಕೊಳ್ಳುವುದು ಈ ತಿದ್ದುಪಡಿಯ ಉದ್ದೇಶವಾಗಿದೆ. ಇದರಿಂದ ಕಾರ್ಮಿಕರಿಗೆ ಒತ್ತಡ, ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆ ಮಾಲೀಕರಿಗೆ 6 ದಿನದ ಉತ್ಪಾದನೆಯನ್ನು ನಾಲ್ಕು ದಿನಗಳಲ್ಲೇ ಉತ್ಪಾದನೆ ಮಾಡಿಸಿಕೊಳ್ಳಲು ಈ ಕಾಯ್ದೆಯಲ್ಲಿ ಅವಕಾಶ ಸಿಗಲಿದೆ. ಇದು ಕಾರ್ಮಿಕರ ಶ್ರಮದ ಅತೀವ ಶೋಷಣೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
3 ಪಾಳಿಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟೀನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ತಿದ್ದುಪಡಿ ಕಾನೂನು ಮಾಲೀಕರಿಗೆ ಅನುಕೂಲವಾಗಲಿದೆ. ದುಡಿಯುವ ಮಹಿಳೆಯರ ಸುರಕ್ಷತೆ, ಕೆಲಸದ ಭದ್ರತೆ, ಸಾರಿಗೆ, ಸೇವಾ ಸೌಲಭ್ಯಗಳಿಂದ ಮಹಿಳಾ ಕಾರ್ಮಿಕರು ವಂಚಿತರಾಗಿದ್ದಾರೆ. ಕೂಡಲೇ ಈ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಎಂ.ಎಂ.ಶಿವಕುಮಾರ್, ಸಿ.ಕುಮಾರಿ, ಮಹದೇವಮ್ಮ, ಜಿ.ರಾಮಕೃಷ್ಣ, ಯತೀಶ, ಕೋಮಾರಪ್ಪ, ಶಿವಕುಮಾರ, ಸುಮತಿ, ಉಮೇಶ, ಮುನು, ಚಂದ್ರಶೇಖರ್, ಪ್ರದೀಪ್, ರಾಮು, ಶಶಿಕಲಾ, ಪುಟ್ಟಮ್ಮ, ಜಯಶೀಲಾ, ಶ್ರೀನಿವಾಸ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.