ಮಳವಳ್ಳಿ: ತಾಲ್ಲೂಕು ಕಾಂಗ್ರೆಸ್ ಸಮಿತಿಗಳಿಗೆ ನೇಮಕವಾಗಿರುವ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಅವರನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿನಂದಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಿದ ಅವರು, ‘ಹಿಂದಿನ ಅಧ್ಯಕ್ಷರು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲು ಶ್ರಮಿಸಿದ್ದಾರೆ. ನೀವು ಸಹ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ತಾಲ್ಲೂಕಿನಿಂದ ಹೆಚ್ಚಿನ ಮತಗಳನ್ನು ತಂದುಕೊಡುವ ನಿಟ್ಟಿನಲ್ಲಿ ಸಂಘಟನೆ ಮಾಡಬೇಕು’ ಎಂದು ಹೇಳಿದರು.
ಅಭಿನಂದನೆ ಸ್ವೀಕರಿಸಿ ದೊಡ್ಡಯ್ಯ ಮಾತನಾಡಿ, ‘ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಬ್ಲಾಕ್ ಕಾಂಗ್ರೆಸ್ ದೊಡ್ಡ ಹುದ್ದೆ ನೀಡಿದ್ದಾರೆ. ಅವರ ಮತ್ತು ಎಲ್ಲರ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸದೃಢಗೊಳಿಸಲು ಮುಂದಾಗುತ್ತೇನೆ’ ಎಂದು ಹೇಳಿದರು.
ಸಿ.ಪಿ.ರಾಜು ಮಾತನಾಡಿ, ‘ವಿಧಾನಸಭೆ ಚುನಾವಣೆಯಲ್ಲಿ ಸಿಕ್ಕಿರುವ ಯಶಸ್ಸನ್ನು ಲೋಕಸಭೆಯಲ್ಲೂ ಮುಂದುವರಿಸಿಕೊಂಡು ಹೋಗಲು ಎಲ್ಲರ ಸಹಕರಿಸಬೇಕು’ ಎಂದು ಮನವಿ ಮಾಡಿದರು.
ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಪುರಸಭೆ ಸದಸ್ಯರಾದ ಎಂ.ಎನ್.ಶಿವಸ್ವಾಮಿ, ಎಂ.ಆರ್.ರಾಜಶೇಖರ್, ಮುಖಂಡರಾದ ಆರ್.ಎನ್.ವಿಶ್ವಾಸ್, ಸಿ.ಮಾಧು, ಬಸವರಾಜು, ಬಂಕ್ ಮಹದೇವು, ದಿಲೀಪ್ ಕುಮಾರ್ (ವಿಶ್ವ), ಶಿವರಾಜ್ ನಾಯಕ್ ಇದ್ದರು.