ಪಾಂಡವಪುರ: 5 ದಿನದ ಗಂಡು ಶಿಶುವನ್ನು ಮರದ ಕೆಳಗೆ ಪ್ಲಾಸ್ಟಿಕ್ ಬುಟ್ಟಿಯಲ್ಲಿಟ್ಟು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗೇಟ್ ಬಳಿಯ ಲೋಕಪಾವನಿ ನದಿಯ ಸಮೀಪ ಶನಿವಾರ ಬೆಳಿಗ್ಗೆ ನಡೆದಿದೆ.
ಮಗುವಿಗೆ ಶಾಲು, ಟವೆಲ್, ಸ್ಕಾರ್ಪ್ ಹೊದಿಸಿದ್ದರು. ಜಮೀನಿಗೆ ತೆರಳುತ್ತಿದ್ದ ರೈತರು ಮಗು ಅಳುತ್ತಿರುವ ಶಬ್ದ ಕೇಳಿ ಬುಟ್ಟಿ ತೆಗೆದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ಅವರು ಮಗುವಿನ ಬಗ್ಗೆ ಕಾಳಜಿ ವಹಿಸಿ ಅಗತ್ಯ ಚಿಕಿತ್ಸೆ ನೀಡುವ ಜತೆಗೆ ಆರೋಗ್ಯ ಸಿಬ್ಬಂದಿಯೊಂದಿಗೆ ಮಂಡ್ಯಕ್ಕೆ ತೆರಳಿ ಮಗುವನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ‘ಮಗುವಿನ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ತೊಂದರೆ ಇಲ್ಲ. ಆದರೂ ಮಗುವಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ಮುಂದಿನ ನಾಲ್ಕು ದಿನ ಮಗುವನ್ನು ನಿಗಾ ಘಟಕದಲ್ಲಿ ಇರಿಸಲಾಗುವುದು ಎಂದು ಟಿಎಚ್ಒ ಡಾ.ಅರವಿಂದ್ ತಿಳಿಸಿದರು.