ಮದ್ದೂರು: ‘ಯುವ ಜನತೆ ಸ್ವಾತಂತ್ರ್ಯ ಚಳವಳಿ ಬಗ್ಗೆ ತಿಳಿಯುವ ಮೂಲಕ ದೇಶಾಭಿಮಾನ ಬೆಳೆಸಿಕೊಳ್ಳಬೇಕು’ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ. ಚಂದು ಸಲಹೆ ನೀಡಿದರು.
ಸರ್ಕಾರದ ಆದೇಶದಂತೆ ಕ್ವಿಟ್ ಇಂಡಿಯಾ ಚಳವಳಿ ಆಚರಣೆ ಪ್ರಯುಕ್ತ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
‘ಸ್ವಾತಂತ್ರ್ಯ ಚಳವಳಿಯಲ್ಲಿ ಮಹಾತ್ಮ ಗಾಂಧಿ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಹೋರಾಟ ನಡೆಸಿದ್ದರ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿತು. ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳು ಕಳೆದರೂ ದೇಶದಲ್ಲಿ ಅಪರಾಧ, ಭ್ರಷ್ಟಾಚಾರ, ಹಿಂಸೆ, ಬಡತನ, ಅನಕ್ಷರತೆ, ನಿರುದ್ಯೋಗ, ಮೂಢನಂಬಿಕೆಯಂತಹ ಸಮಸ್ಯೆಗಳು ಜೀವಂತವಾಗಿವೆ. ಇವುಗಳ ವಿರುದ್ಧ ಯುವಜನತೆ ಒಗ್ಗಟ್ಟಿನಿಂದ ಹೋರಾಡಬೇಕು’ ಎಂದು ಸಲಹೆ ನೀಡಿದರು.
ಗ್ರೇಡ್–2 ತಹಶೀಲ್ದಾರ್ ಜಿ.ಎಂ.ಸೋಮಶೇಖರ್ ಮಾತನಾಡಿ, ‘ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಲು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಟ ಮಾಡಿದ ಮಹನೀಯರು ಹಾಗೂ ಮಹಿಳೆಯರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ’ ಎಂದರು.
ಶಾಂತ ಚಂದು, ಸಿ.ಅಪೂರ್ವಚಂದ್ರ, ಕಂದಾಯ ಇಲಾಖೆ ಅಧಿಕಾರಿಗಳಾದ ರವಿಶಂಕರ್, ನವೀನ್, ವೆಂಕಟೇಶ್, ಮಂಜುನಾಥ್, ಚಂದ್ರಶೇಖರ್, ಮಹೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.