ರಸ್ತೆಯಲ್ಲಿ ಜಲ್ಲಿ ರಾಶಿ; ಜನರ ಪರದಾಟ

ಶ್ರೀರಂಗಪಟ್ಟಣ: ತಾಲ್ಲೂಕಿನ ಚೊಟ್ಟನಹಳ್ಳಿ ಹಾಗೂ ಹುಣಸನಹಳ್ಳಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ ಮೂರು ತಿಂಗಳ ಹಿಂದೆಯೇ ಜಲ್ಲಿ ತಂದು ಸುರಿದು ಹಾಗೇ ಬಿಟ್ಟಿದ್ದು ಜನರು ತೊಂದರೆ ಅನುಭವಿಸುತ್ತಿದ್ದಾರೆ.
ತಾಲ್ಲೂಕಿನ ಅರಕೆರೆ ಹೋಬಳಿಯ ಹುಣಸನಹಳ್ಳಿ ಮತ್ತು ಚೊಟ್ಟನಹಳ್ಳಿ ಗ್ರಾಮಗಳ ಮಧ್ಯ ಭಾಗದಲ್ಲಿ ಜಲ್ಲಿಯನ್ನು ತಂದು ಗುಡ್ಡೆ ಹಾಕಲಾಗಿದೆ. ಜನರು ಓಡಾಡುವ ರಸ್ತೆಯಲ್ಲಿ ಮೂರು
ತಿಂಗಳ ಹಿಂದೆ ಜಲ್ಲಿ ಸುರಿಯಲಾಗಿದೆ. ರಸ್ತೆಯಲ್ಲಿ ಜಲ್ಲಿ ಗುಡ್ಡೆಗಳು ಬಿದ್ದಿರುವುದರಿಂದ ಎತ್ತಿನ ಗಾಡಿ, ಟ್ರಾಕ್ಟರ್, ಕಾರುಗಳು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.
ಆ.11ರಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಎರಡೂ ಗ್ರಾಮಗಳಲ್ಲಿ ಹತ್ತಾರು ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಮಾಡಿದ್ದರು. ಆದಷ್ಟು ಶೀಘ್ರ ಕಾಮಗಾರಿ ಮುಗಿಸುವ ಭರವಸೆಯನ್ನೂ ನೀಡಿದ್ದರು. ಇದಾಗಿ ಮೂರು ತಿಂಗಳು ಕಳೆದರೂ ಇದುವರೆಗೆ ಕಾಮಗಾರಿ ಆರಂಭವಾಗಿಲ್ಲ. ರಸ್ತೆಗಳಲ್ಲಿ ಜಲ್ಲಿ ಗುಡ್ಡೆ ಹಾಕಿರುವುದರಿಂದ ಉಂಟಾಗುತ್ತಿರುವ ತೊಂದರೆ ಕುರಿತು ಎರಡೂ ಗ್ರಾಮಗಳ ಜನರು ಅಧಿಕಾರಿಗಳು ಮತ್ತು ಶಾಸಕರ ಗಮನ ಸೆಳೆದಿದ್ದಾರೆ. ಆದರೆ ಯಾರೊಬ್ಬರೂ ಇತ್ತ ಗಮನ ಹರಿಸುತ್ತಿಲ್ಲ ಎಂದು ಚೊಟ್ಟನಹಳ್ಳಿ ಅಭಿಷೇಕ್ ದೂರಿದ್ದಾರೆ.
ಹುಣಸನಹಳ್ಳಿ ಮತ್ತು ಚೊಟ್ಟನಹಳ್ಳಿ ಗ್ರಾಮಗಳಲ್ಲಿ ಊರೊಳಗಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ವಿನಯ್ ಎಂಬವರು ಟೆಂಡರ್ ಪಡೆದಿದ್ದಾರೆ. ಕಾಮಗಾರಿಗೆ ಚಾಲನೆ ನೀಡುವ ದಿನ ಬಂದು ಹೋದ ಗುತ್ತಿಗೆದಾರ ಮತ್ತೆ ಬಂದಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.