ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Last Updated 14 ಜುಲೈ 2020, 12:48 IST
ಅಕ್ಷರ ಗಾತ್ರ

ಮಂಡ್ಯ: ಲಾಕ್‌ಡೌನ್‌ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಕಾಲೇಜು ಪ್ರಾರಂಭವಾಗುವವರೆಗೂ ವೇತನ ನೀಡಿ ಸೇವಾ ಭದ್ರತೆ ನೀಡಬೇಕು, ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಸದಸ್ಯರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.‌

ರಾಜ್ಯದಲ್ಲಿ 412 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಶೈಕ್ಷಣಿಕ ವರ್ಷದಲ್ಲಿ 10 ತಿಂಗಳಿಗೆ ಗೌರವಧನ ನೀಡುತ್ತಿದ್ದು, ಇನ್ನೆರಡು ತಿಂಗಳಿಗೆ ನೀಡುತ್ತಿಲ್ಲ. ಪಾಠ ಅಲ್ಲದೆ ಪರೀಕ್ಷೆ, ಮೌಲ್ಯಮಾಪನದಂತಹ ಸಕ್ರಿಯ ಕಾರ್ಯದಲ್ಲಿ ಭಾಗಿಯಾದರೂ ಅದನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಲಾಕ್‌ಡೌನ್‌ ಅವಧಿಯಲ್ಲಿ ಆರ್ಥಿಕ ಸಮಸ್ಯೆ ಎದುರಿಸಲಾಗದೆ ರಾಜ್ಯದ ವಿವಿಧ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದ 8 ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೊಂದು ಕುಟುಂಬಕ್ಕೂ ₹10 ಲಕ್ಷ ಪರಿಹಾರ ನೀಡಬೇಕು. ಉದ್ಯೋಗ ಭದ್ರತೆ, ಭವಿಷ್ಯ ನಿಧಿ, ವೈದ್ಯಕೀಯ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಬೋಧಕ ಸಮುದಾಯ ಹಸಿವು ಮತ್ತು ಅಪಮಾನ ಸಂಕಟದಲ್ಲಿ ನರಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಳ ಇಲ್ಲದ ಕಾರಣ ಅನಾರೋಗ್ಯ ಪೀಡಿತ ಉಪನ್ಯಾಸಕರು ಆಸ್ಪತ್ರೆಯಲ್ಲಿ ನರಳುತಿದ್ದು, ಕೂಡಲೇ ಅವರ ನೆರವಿಗೆ ಧಾವಿಸಬೇಕು. ಹರಿಯಾಣ, ಪಶ್ಚಿಮ ಬಂಗಾಳ ಮಾದರಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕು. 2020ನೇ ಸಾಲಿನ ಅನಗತ್ಯ ನಿಯೋಜನೆ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರಾದ ನಾಗರಾಜು, ಸಿದ್ದರಾಜು, ಮಹೇಶ್‌, ಶಿವಕುಮಾರ್‌, ದಿಲೀಪ್‌, ಪ್ರಕಾಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT