ಶ್ರೀರಂಗಪಟ್ಟಣ (ಮಂಡ್ಯ): ‘ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸಿ ಗಂಗಾಮತಸ್ಥ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಗಂಭೀರ ಪ್ರಯತ್ನ ಮಾಡುತ್ತೇನೆ’ ಎಂದು ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಇಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಗಂಗಾಮತಸ್ಥ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ಬೇಡಿಕೆ ಹಲವು ದಶಕಗಳಿಂದಲೂ ಇದೆ. ಸುದೀರ್ಘ ಕಾಲ ಅಧಿಕಾರ ನಡೆಸಿರುವ ಕಾಂಗ್ರೆಸ್ ಈ ಜನಾಂಗವನ್ನು ನಿರ್ಲಕ್ಷಿಸುತ್ತಲೇ ಬಂದಿದೆ’ ಆರೋಪಿಸಿದರು.
‘ಮಂಡ್ಯ ಜಿಲ್ಲೆಗೆ ನೀರು ಕೊಡದೆ ಮರಳುಗಾಡು ಮಾಡಿದವರು ಜಿಲ್ಲೆಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿರುವುದು ಹಾಸ್ಯಾಸ್ಪದ. ಈಗಾಗಲೇ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿದೆ. ನಿಮ್ಮ ಪ್ರಣಾಳಿಕೆಯ ಅಂಶಗಳನ್ನು ಅನುಷ್ಠಾನಕ್ಕೆ ತರಲು ಎಲ್ಲಿಂದ ದುಡ್ಡು ತರುತ್ತೀರಿ’ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.