ಮಂಡ್ಯ: ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಂಡ್ಯದ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್ ಸ್ವಾಗತಿಸಿದ್ದು, ಮತ್ತೆ ಓದು ಮುಂದುವರಿಸುವುದಾಗಿ ಹೇಳಿದ್ದಾರೆ.
ಕಳೆದ ವರ್ಷ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪೊಂದರ ‘ಜೈ ಶ್ರೀರಾಮ್’ ಘೋಷಣೆಗೆ ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗುವ ಮೂಲಕ ಮುಸ್ಕಾನ್ ಗಮನ ಸೆಳೆದಿದ್ದರು. ಹಿಂದಿನ ಬಿಜೆಪಿ ಸರ್ಕಾರ ಶಾಲೆ–ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿದ್ದನ್ನು ಪ್ರತಿಭಟಿಸಿ ಕಾಲೇಜು ತೊರೆದಿದ್ದು, ಬಿ.ಕಾಂ. ಪರೀಕ್ಷೆಗೂ ಹಾಜರಾಗಿರಲಿಲ್ಲ.
‘ ಈ ಹಿಂದಿನ ಸರ್ಕಾರ ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದಕ್ಕೆ ನಿಷೇಧ ಹೇರಿದ್ದ ಕಾರಣ ನನ್ನ ಓದನ್ನು ಅರ್ಧಕ್ಕೆ ನಿಲ್ಲಿಸಿದ್ದೆ. ಒಂದು ವರ್ಷದಿಂದ ಬೇರೆ ಕೋರ್ಸ್ ಓದುತ್ತಿದ್ದೆ. ಈಗಿನ ಸರ್ಕಾರದ ನಿರ್ಧಾರದಿಂದ ಖುಷಿ ಆಗಿದೆ. ಈಗ ಮತ್ತೆ ಕಾಲೇಜಿಗೆ ತೆರಳುತ್ತೇನೆ‘ ಎಂದರು.