ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಬಿಎಲ್‌ ಕಂಪನಿಯಿಂದ ಗಣಿ ಅಕ್ರಮ: ಸಚಿವ ಮುರುಗೇಶ್‌ ನಿರಾಣಿ

ಕಾಳೇನಹಳ್ಳಿ ಅರಣ್ಯದಲ್ಲಿ ಪರಿಶೀಲಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ
Last Updated 23 ಫೆಬ್ರುವರಿ 2021, 4:36 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಡಿಬಿಎಲ್‌ ಹೆಸರಿನ ಗುತ್ತಿಗೆ ಕಂಪನಿ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.

ತಾಲ್ಲೂಕಿನ ಕಾಳೇನಹಳ್ಳಿ ಬಳಿ ಅರಣ್ಯದಲ್ಲಿ ಡಿಬಿಎಲ್‌ ಕಂಪನಿ ನಡೆಸು ತ್ತಿರುವ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಸೋಮ ವಾರ ಸಂಸದೆ ಸುಮಲತಾ ಹಾಗೂ ಅಧಿಕಾರಿಗಳ ಜತೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು.

ಡಿಬಿಎಲ್‌ ಕಂಪನಿ ಸುಮಾರು 1.5 ಲಕ್ಷ ಟನ್ ಕಲ್ಲು ತೆಗೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ತೆಗೆದಿರುವ ಕಲ್ಲಿಗೆ ಆ ಕಂಪನಿಯಿಂದ ರಾಜಧನ ವಸೂಲು ಮಾಡಲಾಗುವುದು. ಕಾನೂನು ಕ್ರಮದ ಬಗೆಗೂ ಚಿಂತನೆ ನಡೆದಿದೆ ಎಂದು ಹೇಳಿದರು.

ಡಿಬಿಎಲ್‌ ಕಂಪನಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರೂ ಅಧಿಕಾರಿಗಳು ಸುಮ್ಮನಿರುವುದು ಅನುಮಾನ ಮೂಡಿಸಿದೆ. ಈ ಅಕ್ರಮದಲ್ಲಿ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿವೆ. ಅಕ್ರಮಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಇದೆ ಎಂಬ ಬಗೆಗೂ ದೂರುಗಳಿವೆ. ಸಂಸದರು ಕೂಡ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಜಲಾಶಯದ ಅಸ್ತಿತ್ವಕ್ಕೆ ಧಕ್ಕೆ ಬರದಂತೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೊಸ ಗಣಿ ನೀತಿ

ಗಣಿ ಅಕ್ರಮ ತಡೆಗೆ ಹೊಸ ಗಣಿ ನೀತಿ ರೂಪಿಸಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು. ಅಭಿವೃದ್ಧಿ ಕೆಲಸ ನಡೆಯಲು ಗಣಿಗಾರಿಕೆ ಅನಿವಾರ್ಯ. ಆದರೆ, ಕಾನೂನು ಬದ್ಧವಾಗಿ ನಡೆಯುವಂತೆ ನಿಯಮ ಜಾರಿ ಮಾಡುತ್ತೇವೆ. ನಿಯಮ ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವವರು ಪ್ರಭಾವಿಗಳಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚೆಕ್‌ಪೋಸ್ಟ್‌ಗಳಲ್ಲಿ ಕೂಡ ಮಾಹಿತಿ ಪಡೆಯಲಾಗುತ್ತದೆ. ಕಲ್ಲು ಗಣಿಗಾರಿಕೆಗಾಗಿ ಅರಣ್ಯ, ಕೆರೆ, ಕಟ್ಟೆಗಳ ನಾಶ ಆಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು.

ಕೆಆರ್‌ಎಸ್‌ ಉಳಿಸಲು ಪಣ

ಸಂಸದೆ ಸುಮಲತಾ ಮಾತನಾಡಿ, ಜಿಲ್ಲೆಯ ಜೀವನಾಡಿಯಾಗಿರುವ ಕೆಆರ್‌ಎಸ್‌ ಜಲಾಶಯಕ್ಕೆ ಕಲ್ಲು ಗಣಿಗಾರಿಕೆಯಿಂದ ಅಪಾಯ ಎದುರಾಗಿದೆ. ಹಾಗಾಗಿ ಈ ಭಾಗದ ರೈತರು ಆತಂಕಗೊಂಡಿದ್ದಾರೆ. ಈ ಬಗ್ಗೆ ಸಂಸತ್‌ನಲ್ಲಿ ಕೂಡ ಮಾತನಾಡಿದ್ದು, ಸಂಬಂಧಿಸಿದ ಸಚಿವರ ಗಮನ ಸೆಳೆದಿದ್ದೇನೆ. ಜಲಾಶಯಕ್ಕೆ ಅಪಾಯ ಉಂಟಾಗದಂತೆ ಎಲ್ಲ ರೀತಿಯ ಹೋರಾಟಕ್ಕೂ ಸಿದ್ಧ ಇದ್ದೇನೆ ಎಂದು ತಿಳಿಸಿದರು.

ತಹಶೀಲ್ದಾರ್‌ ಎಂ.ವಿ.ರೂಪಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪುಷ್ಪಾ, ವಲಯ ಅರಣ್ಯಾಧಿಕಾರಿ ಸುನೀತಾ, ಅಧಿಕಾರಿಗಳು ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT