ಮಂಡ್ಯ: ‘ಡಿಸೆಂಬರ್ನಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಮಂಡ್ಯದಲ್ಲಿ ತಿಂಗಳಿಗೊಂದು ಪೂರ್ವಭಾವಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ.ಮಹೇಶ್ ಜೋಶಿ ಸೋಮವಾರ ಹೇಳಿದರು.
ಶ್ರೀರಂಗಪಟ್ಟಣದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ‘ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಕೆಲವು ಲೋಪದೋಷಗಳನ್ನು ಸರಿಪಡಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗುವುದು. ಹಾವೇರಿ ಸಮ್ಮೇಳನ ದಾಖಲೆ ಸೃಷ್ಟಿ ಮಾಡಿದ್ದು ಆ ದಾಖಲೆಯನ್ನು ಮಂಡ್ಯ ಸಮ್ಮೇಳನದಲ್ಲಿ ಮುರಿಯಲಾಗುವುದು’ ಎಂದರು.
‘ಹಾವೇರಿ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಮಂಡ್ಯ ಸಮ್ಮೇಳನದ ವೇಳೆಗೆ ಅನುಷ್ಠಾನಕ್ಕೆ ಬರಲಿವೆ. ‘ಸಮಗ್ರ ಕನ್ನಡ ಅಭಿವೃದ್ಧಿ ಕಾನೂನು’ ಜಾರಿಯಾಗುತ್ತಿದ್ದು ಇದರಿಂದ ಕನ್ನಡ ಶಾಲೆಗಳು ಮುಚ್ಚುವುದು ತಪ್ಪಲಿದೆ, ಕನ್ನಡ ಆಡಳಿತ ಭಾಷೆಯಾಗಲಿದೆ, ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ದೊರೆಯಲಿದೆ’ ಎಂದರು.