ಮಂಡ್ಯ: ಕೊಡಗು, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಭಾನುವಾರ 30 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಭಾನುವಾರ ಸಂಜೆ 6 ಗಂಟೆ ವೇಳೆಗೆ ಒಳಹರಿವಿನ ಪ್ರಮಾಣ 17,088 ಕ್ಯುಸೆಕ್ ಇದ್ದರೆ, ಹೊರಹರಿವು 30,330 ಕ್ಯುಸೆಕ್ ದಾಖಲಾಗಿತ್ತು. ಜಲಾಶಯದ ನೀರಿನ ಮಟ್ಟ 124.69 (ಗರಿಷ್ಠ ಮಟ್ಟ: 124.80) ಅಡಿಗೆ ತಲುಪಿತ್ತು.
ಸೋಮವಾರ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ 50 ಸಾವಿರ ಕ್ಯುಸೆಕ್ವರೆಗೆ ಹೊರಹರಿವು ಹೆಚ್ಚಳ ಮಾಡಲಾಗುವುದು. ಅದಕ್ಕೂ ಮೊದಲು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಸೂಚನೆ ನೀಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮದ ಮೂಲಗಳು ತಿಳಿಸಿವೆ.
ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರದಿಂದ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ.