ಮಂಡ್ಯ: ಅಚ್ಚರಿಯ ಬೆಳವಣಿಗೆಯಲ್ಲಿ ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಯಶಸ್ವಿಯಾಗಿದ್ದಾರೆ.
ಭಾನುವಾರ ಬೆಳಿಗ್ಗೆವರೆಗೂ ಯುವನಾಯಕಿ ಡಾ.ಲಕ್ಷ್ಮಿಅಶ್ವಿನ್ಗೌಡ ಅವರೇ ಜೆಡಿಎಸ್ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಭಾನುವಾರ ಮಧ್ಯಾಹ್ನ ಎಲ್.ಆರ್.ಶಿವರಾಮೇಗೌಡ ಅವರ ಹೆಸರು ಪ್ರಕಟಿಸಿದರು. ಐಆರ್ಎಎಸ್ ಹುದ್ದೆಗೆ ಆಯ್ಕೆಯಾಗಿದ್ದ ಲಕ್ಷ್ಮಿಅಶ್ವಿನ್ಗೌಡ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದರು.
ರಾಜ್ಯ ವಿಧಾನಸಭೆ ಚುನಾವಣೆ ವೇಳೆ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧೆಗೆ ಬಯಸಿದ್ದರು. ಆದರೆ ವರಿಷ್ಠರು ಲೋಕಸಭೆ ಉಪ ಚುನಾವಣೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪಿದ್ದು ಲಕ್ಷ್ಮಿ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಎಲ್.ಆರ್.ಶಿವರಾಮೇಗೌಡ: 1989, 1994ರಲ್ಲಿ ಎರಡು ಬಾರಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರು ಒಂದೂವರೆ ಲಕ್ಷ ಮತ ಗಳಿಸಲು ಯಶಸ್ವಿಯಾಗಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ ಜೆಡಿಎಸ್ ಸೇರಿದ್ದರು.