ಬೆಂಗಳೂರು:ಮೈಷುಗರ್ ಸಕ್ಕರೆ ಕಾರ್ಖಾನೆ ನಿರ್ವಹಣೆಕುರಿತು ಗುರುವಾರ ಇಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹಾಗೂ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡುವ ಸಂಪುಟ ಸಭೆಯ ನಿರ್ಣಯ ಹಿಂಪಡೆಯುವಂತೆ ಜಿಲ್ಲೆಯ ಶಾಸಕರು, ರೈತ ಮುಖಂಡರು ಆಗ್ರಹಿಸಿದರು.
ಸರ್ಕಾರ ಕೇವಲ ₹10-12 ಕೋಟಿ ಕೊಟ್ಟರೆ ಸಕ್ಕರೆ ಕಾರ್ಖಾನೆ ಆರಂಭ ಮಾಡಬಹುದು ಎಂದು ರೈತರು ಅಭಿಪ್ರಾಯಪಟ್ಟರು. ಆದರೆ ಕಾರ್ಖಾನೆ ನೂರಾರು ಕೋಟಿ ರೂಪಾಯಿ ನಷ್ಟದಲ್ಲಿದೆ. ಕೇವಲ ಕಾರ್ಖಾನೆಯನ್ನು ಮಾತ್ರ ಖಾಸಗಿಯವರಿಗೆ ನೀಡಲು ತೀರ್ಮಾನ ಮಾಡಲಾಗಿದೆ. ಕಾರ್ಖಾನೆಗೆ ಸಂಬಂಧಿಸಿದ ಇತರ ಯಾವುದೇಆಸ್ತಿಯನ್ನು ನೀಡುತ್ತಿಲ್ಲ ಎಂದು ಸಚಿವರು ಸಭೆಗೆ ಮಾಹಿತಿ ನೀಡಿದರು.
ರೈತರ ಹಿತ ಕಾಪಾಡುವುದು ನಮ್ಮ ಉದ್ದೇಶ. ಆದಷ್ಟು ಬೇಗ ಸಕ್ಕರೆ ಕಾರ್ಖಾನೆ ಆರಂಭವಾಗಬೇಕು. ಆ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದರು.
ಸಭೆಯಲ್ಲಿ ಚರ್ಚಿಸಿದ ವಿಚಾರವನ್ನು ಸಿಎಂ ಗಮನಕ್ಕೆ ತರುತ್ತೇವೆ. ಸಿಎಂ ಈ ಬಗ್ಗೆ ನೀಡುವ ಸೂಚನೆಯನ್ನ ಪಾಲಿಸುತ್ತೇವೆ ಎಂದು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು.
ಸಭೆಯಲ್ಲಿ ಸಂಸದೆ ಸುಮಲತಾ, ಶಾಸಕರಾದ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಎಂ. ಶ್ರೀನಿವಾಸ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಶ್ರೀಕಂಠೇಗೌಡ ಹಾಗೂ ರೈತ ಮುಖಂಡರು ಪಾಲ್ಗೊಂಡಿದ್ದರು.