ಮಂಡ್ಯ: ಸರೋವರ ಹೋಟೆಲ್ ಮಾಲೀಕ ಆತ್ಮಹತ್ಯೆ

ಮಂಡ್ಯ: ಆತ್ಮಹತ್ಯೆಗೆ ಯತ್ನಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಶೋಕ್ ನಗರ, 2ನೇ ಕ್ರಾಸ್ನಲ್ಲಿರುವ ಸರೋವರ ವಿಲಾಸ್ ಹೋಟೆಲ್ ಮಾಲೀಕ ವೇಣುಗೋಪಾಲ್ (62) ಗುರುವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಚಾಮುಂಡೇಶ್ವರಿ ನಗರದ ನಿವಾಸದಲ್ಲಿ ಅವರು ಭಾನುವಾರ ರಾತ್ರಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹೊತ್ತಿಸಿಕೊಂಡಿದ್ದರು. ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶೇ 70ರಷ್ಟು ಸುಟ್ಟಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಾಥಮಿಕ ತನಿಖೆಯ ಅನ್ವಯ ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯ ಫಲಿತಾಂಶ ಇನ್ನೆರಡು ದಿನದಲ್ಲಿ ಬರಲಿದ್ದು ಸಾವಿಗೆ ನಿಖರ ಕಾರಣ ತಿಳಿಯಲಿದೆ. ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದರು.
ವೇಣುಗೋಪಾಲ್ ಅವರು ಪಿಇಎಸ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಪಿಇಎಸ್ ಕಾಲೇಜಿನ ಹಲವು ಕಟ್ಟಡಗಳ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಿವೃತ್ತಿಯ ನಂತರ ಸರೋವರ ಹೋಟೆಲ್ ನಡೆಸುತ್ತಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.