ಮಳವಳ್ಳಿ: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಗೆಲುವು ನಿಶ್ಚಿತ’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಕಚೇರಿಯಲ್ಲಿ ಸೋಮವಾರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಜೋಗಿಪುರ ಗ್ರಾಮದ ಕೆಂಪರಾಜು, ಸಿದ್ದರಾಜು ಸೇರಿದಂತೆ ಹಲವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗಿದ್ದೇವೆ. ನಮ್ಮ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಎಸ್.ದ್ಯಾಪೇಗೌಡ ಹಾಗೂ ಮುಖಂಡ ಬಂಕ್ ಮಹದೇವು ಇದ್ದರು.
ಹಲವರ ಸೇರ್ಪಡೆ: ತಾಲ್ಲೂಕಿನ ಪೂರಿಗಾಲಿ ಗ್ರಾಮದ ಶಾಸಕರ ನಿವಾಸದಲ್ಲಿ ಹಲಗೂರು ಹೋಬಳಿಯ ವಿ.ಬಸಾಪುರ ಗ್ರಾಮದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಮುಖಂಡರಾದ ವೇದಾವತಿ ಹಾಗೂ ವನಜಾಕ್ಷಿ ಸೇರಿದಂತೆ ಹಲವರು ಬಿಜೆಪಿ ತೊರೆದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಹಾಗೂ ಮುಖಂಡ ಜಗದೀಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.