ಮೇಲುಕೋಟೆ (ಮಂಡ್ಯ): ಧಾರ್ಮಿಕ ಕ್ಷೇತ್ರ ಮೇಲುಕೋಟೆ ತೊಟ್ಟಿಲುಮಡು ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರ ಮೇಲೆ ಬುಧವಾರ ಹೆಜ್ಜೇನು ದಾಳಿ ಮಾಡಿದ್ದು 80 ಮಂದಿ ಅಸ್ವಸ್ಥರಾಗಿದ್ದಾರೆ. 17 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರತಿವರ್ಷದಂತೆ ಶ್ರೀಕ್ಷೇತ್ರದಲ್ಲಿ ತೊಟ್ಟಿಲುಮಡು ಜಾತ್ರೆ ಮಂಗಳವಾರ ಆರಂಭಗೊಂಡಿದೆ. ಮೊದಲ ದಿನ ರಾಜಮುಡಿ ಉತ್ಸವದೊಂದಿಗೆ ಜಾತ್ರೆ ಆರಂಭಗೊಂಡಿತ್ತು. ಬುಧವಾರ ತೊಟ್ಟಿಲುಮಡು ಉತ್ಸವ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿವೆ. ರಾಜ್ಯದ ವಿವಿಧ ಭಾಗದಿಂದ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಬಂದಿದ್ದರು, ಬಹುಕೇಕ ಜನರು ಉಪವಾಸ ವ್ರತಾಚರಣೆಯೊಂದಿಗೆ ಅಷ್ಟತೀರ್ಥೋತ್ಸವದಲ್ಲಿ ಭಾಗಿಯಾಗಿದ್ದರು.
ಉತ್ಸವದ ಅಂಗವಾಗಿ ಚಲುವರಾಯಸ್ವಾಮಿ ಪಾದುಕೆ ಮೆರವಣಿಗೆ ಕಲ್ಯಾಣಿಗಳ ಮೂಲಕ ಸಾಗುತ್ತಿತ್ತು. ಭಕ್ತರು ಪ್ರತಿ ಕಲ್ಯಾಣಿಗಳಲ್ಲೂ ಪವಿತ್ರ ತೀರ್ಥ ಸ್ನಾನ ಮಾಡುತ್ತಾ ಸಾಗುತ್ತಿದ್ದರು. ಉತ್ಸವ ನಾಗರತೀರ್ಥದ ಬಳಿ ಸಾಗುತ್ತಿದ್ದಾಗ ಹೆಜ್ಜೇನು ಏಕಾಏಕಿ ದಾಳಿ ನಡೆಸಿವೆ. ದಾಳಿಯಿಂದ ಭಯಪೀಡಿತರಾದ ಸಾವಿರಾರು ಭಕ್ತರು ದಿಕ್ಕಾಪಾಲಾಗಿ ಓಡಿದರು.