ಮಂಡ್ಯ: ಮೈಷುಗರ್ ಕಾರ್ಖಾನೆಯ ಪುನಶ್ಚೇತನಕ್ಕೆ ಮಂಜೂರಾಗಿರುವ ಹಣದಲ್ಲಿ ಬಾಕಿ ಉಳಿದಿರುವ ₹ 17.42 ಕೋಟಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಿ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ಮುಂದಿನ ಜೂನ್ನಿಂದಲೇ ಜಿಲ್ಲೆಯಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ಆರಂಭವಾಗಲಿದೆ. ಕಾರ್ಖಾನೆಯಲ್ಲಿ ಮುಂಚಿತವಾಗಿ ಹಣದ ಅವಶ್ಯಕತೆ ಇರುತ್ತದೆ. ರೈತರಿಗೆ ಮುಂಗಡ ಪಾವತಿ ಸೇರಿದಂತೆ ಕಬ್ಬು ಅರೆಯುವ ಸಂಬಂಧ ಅನೇಕ ಖರ್ಚು ವೆಚ್ಚಗಳಿವೆ. ಆದರೆ, ಬರಬೇಕಾದ ಅನುದಾನ ಬಿಡುಗಡೆಯಾಗದಿದ್ದರೆ ರೈತರಿಗೆ ತೊಂದರೆಯಾಗಲಿದೆ. ಹೀಗಾಗಿ ಈ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ 6,112 ಎಕರೆ ಪ್ರದೇಶದಲ್ಲಿ 3.05 ಲಕ್ಷ ಮೆಟ್ರಿಕ್ ಟನ್ ಕಬ್ಬು ಬೆಳೆದಿದ್ದಾರೆ, ಈಗಾಗಲೇ 3395 ರೈತರು 2023–24ನೇ ಸಾಲಿಗೆ ಕಬ್ಬು ಸರಬರಾಜು ನೋಂದಣಿ ಮಾಡಿಸಿಕೊಂಡಿದ್ದಾರೆ. ಜೂನ್ನಿಂದಲೇ ಕಬ್ಬು ಪೂರೈಕೆ ಪ್ರಾರಂಭಿಸಬಹುದಾಗಿದ್ದು, ಇವರಿಗೆ ಆ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ಹಣದ ಪಾವತಿಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಬಾಕಿ ಇರುವ ಅನುದಾನ ಬಿಡುಗಡೆಯಾಗಬೇಕಿದೆ ಎಂದು ಶಾಸಕರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದ ₹ 50 ಕೋಟಿ ಹಣದಲ್ಲಿ ₹ 17.42 ಕೋಟಿ ಇನ್ನೂ ಬರಬೇಕಾಗಿದೆ. ಮೈಷುಗರ್ ಕಾರ್ಖಾನೆ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿದ್ದು ಕೂಡಲೇ ಬಾಕಿ ಹಣ ಬಿಡುಗಡೆ ಮಾಡಿ ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.