ಶ್ರೀರಂಗಪಟ್ಟಣ: ಮತದಾರರು ವಿವೇಚನೆಯಿಂದ ಮತ ಚಲಾಯಿಸಬೇಕು. ಆಮಿಷಗಳಿಗೆ ಒಳಗಾಗಬಾರದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಡಿ. ರೂಪಾ ತಿಳಿಸಿದರು.
ಪಟ್ಟಣದ ರಂಗನಾಥ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಶ್ರೇಷ್ಠವಾದುದು. ಈ ಹಕ್ಕನ್ನು ಯಾರೂ ಕಳೆದುಕೊಳ್ಳಬಾರದು. ಮತದಾನ ಪ್ರಕ್ರಿಯೆ ಬಗ್ಗೆ ಬಿಎಲ್ಒಗಳು ಸಮಗ್ರ ಮಾಹಿತಿ ನೀಡಬೇಕು ಎಂದರು.
ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಲೋಪ ಇಲ್ಲದಂತೆ ಪೂರ್ಣಗೊಳಿಸಬೇಕು. 18 ವರ್ಷ ಮೀರಿದ ಯಾರ ಹೆಸರೂ ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ನ್ಯಾಯಾಧೀಶರಾದ ಬಿ.ಎಚ್.ಹನುಮಂತರಾಯಪ್ಪ, ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಖಜಾಂಚಿ ಕೆ.ಎಂ.ವಿನಯ್, ಸಂಪನ್ಮೂಲ ವ್ಯಕ್ತಿ ಚ.ನಾರಾಯಣಸ್ವಾಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಹೆಚ್ಚುವರಿ ತಹಶೀಲ್ದಾರ್ ರೇಖಾ ಇದ್ದರು.