ನಾಗಮಂಗಲ: ‘ತಾಲ್ಲೂಕು ಉಸ್ತುವಾರಿ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಕರೆದ ತಾಲ್ಲೂಕಿನ ವಿವಿಧ ಇಲಾಖೆಗಳ ಅಭಿವೃದ್ಧಿ ಪರಿಶೀಲನಾ ಸಭೆಗೆ ಸೂಕ್ತ ಮಾಹಿತಿ ನೀಡದೇ ಗೈರಾದ ತಹಶೀಲ್ದಾರ್ ಸೇರಿದಂತೆ ಹತ್ತು ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡಿ ಅವರ ಮೇಲೆ ಕ್ರಮ ಜರುಗಿಸಿ’ ಎಂದು ತಾ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ತಾಲ್ಲೂಕು ಉಸ್ತುವಾರಿ ಆಡಳಿತಾಧಿಕಾರಿ ಟಿ.ಜವರೇಗೌಡ ಸೂಚನೆ ನೀಡಿದರು.
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಉಸ್ತುವಾರಿ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ತಾಲ್ಲೂಕು ಮಟ್ಟದ ಇಲಾಖೆಗಳ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತಹಶಿಲ್ದಾರ್, ಎಚ್ಎಲ್ಬಿಸಿ, ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ, ರೇಷ್ಮೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಅಬಕಾರಿ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಗೈರಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
‘ಸಭೆಗೆ ಗೈರಾದ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜೊತೆಗೆ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಮಾಹಿತಿ ನೀಡುತ್ತೇನೆ’ ಎಂದರು.
‘ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜನರನ್ನು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಜೊತೆಗೆ ಯೋಜನೆಗಳು ಪರಿಣಮಕಾರಿಯಾಗಬೇಕಾದರೆ ಸಕಾಲಕ್ಕೆ ಜನರಿಗೆ ತಲುಪುವಂತೆ ಎಲ್ಲರೂ ಕೆಲಸ ಮಾಡಬೇಕು’ ಎಂದು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನಂತರ ಸಭೆಗೆ ಹಾಜರಾದ ಇಲಾಖೆಗಳ ಅಧಿಕಾರಿಗಳಿಂದ ಇಲಾಖಾವಾರು ಪ್ರಗತಿ ಪರಿಶೀಲಿಸಿದರು.
ಸಭೆಯಲ್ಲಿ ತಾ.ಪಂ ಇಒ ಚಂದ್ರಮೌಳಿ, ತಾ.ಪಂ ಉದ್ಯೋಗ ಖಾತ್ರಿ ವಿಭಾಗದ ಅಧಿಕಾರಿ ಮೇನಕಾ ದೇವಿ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಡಿಹೆಚ್ಒ ರಮೇಶ್, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಕುಮಾರ್ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.