ಮಳವಳ್ಳಿ: ‘ಸೆ. 21ರಂದು ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ರೈತ ವಿರೋಧಿ ಮೂರು ಸುಗೀವಾಜ್ಞೆಗಳನ್ನು ಅಂಗೀಕಾರಕ್ಕಾಗಿ ಮಂಡಿಸುತ್ತಿದ್ದು, ಅದನ್ನು ಶಾಸನ ಆಗದಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಕರ್ನಾಟಕ ಪ್ರಾಂತ ರೈತ ಸಂಘದ ಒತ್ತಾಯಿಸಿದೆ.
ಪಟ್ಟಣದ ಶಾಸಕ ಕಚೇರಿ ಮುಂಭಾಗ ಬುಧವಾರ ಕರ್ನಾಟಕ ಪ್ರಾಂತ ರೈತ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರಿಗೆ ಮನವಿ ಸಲ್ಲಿಸಿ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್ರಾಜ್ ಮಾತನಾಡಿದರು.
ದೇಶದ ಜನತೆ ಕೊರೊನಾ ಸಂಕಷ್ಟದಲ್ಲಿ ಇರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆ-2020, ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ-2020 ಮತ್ತು ಕಾರ್ಮಿಕರ ಹಕ್ಕುಗಳನ್ನು ದಮನ ಮಾಡುವ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆಗಳಿಗೆ ತಿದ್ದುಪಡಿ ತರಲು ಶಾಸನ ಸಭೆಯಲ್ಲಿ ಸಂಪೂರ್ಣವಾಗಿ ವಿರೋಧಿಸಬೇಕು ಎಂದು ಆಗ್ರಹಿಸಿದರು.
ಬಗರ್-ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಭೂ ಮಂಜೂರಾತಿ ಸಮಿತಿ ರಚಿಸಬೇಕು. ಅಲ್ಲದೇ ತಹಶೀಲ್ದಾರ್ ಕಚೇರಿಯಲ್ಲಿ ಅಸಮರ್ಪಕ ಕಾರ್ಯನಿರ್ವಹಣೆ, ಭ್ರಷ್ಟಾಚಾರ ನಡೆಯುತ್ತಿದ್ದು ಇದನ್ನು ಸರಿಪಡಿಸಲು ಕೂಡಲೇ ಕ್ರಮತೆಗೆದುಕೊಳ್ಳಬೇಕು ಎಂದು ಶಾಸಕರನ್ನು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಶಾಸಕ ಡಾ.ಕೆ.ಅನ್ನದಾನಿ, ‘ನಿಮ್ಮ ಮನವಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದಾಗಿ’ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಲಿಂಗರಾಜುಮೂರ್ತಿ, ಮಹದೇವು, ಟಿ.ಎಚ್.ಆನಂದ್, ಕೆಂಪರಾಜು, ಶಾಂತರಾಜು, ಕೃಷ್ಣಯ್ಯ, ಸಿದ್ದಯ್ಯ, ಮಹದೇವಪ್ಪ, ಚಿಕ್ಕರಾಚಯ್ಯ, ಸೇರಿದಂತೆ ಹಲವರು ಇದ್ದರು.