ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ವಿವಿಧ ಪಕ್ಷಗಳ ಪಕ್ಷಾಂತರ ಪರ್ವ ಮುಂದುವರಿದಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮುಖಂಡರು ಅನ್ಯ ಪಕ್ಷಗಳ ಮುಖಂಡರನ್ನು ಸೇರಿಸಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಹಲವು ಮುಖಂಡರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಮುಖಂಡರು ತಾವೂ ಕೂಡ ಏನೂ ಕಮ್ಮಿ ಇಲ್ಲ ಎಂಬಂತೆ ಬೇರೆ ಪಕ್ಷಗಳ ಮುಖಂಡರಿಗೆ ಸ್ವಾಗತ ಕೋರುತ್ತಿದ್ದಾರೆ.
ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮಕ್ಷಮದಲ್ಲಿ ತಾಲ್ಲೂಕಿನ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಂಜುಂಡೇಗೌಡ, ಪುರಸಭಾ ಮಾಜಿ ಸದಸ್ಯ ಪುರುಷೋತ್ತಮ್,ಸೋಮನಹಳ್ಳಿ ಚಂದ್ರಪ್ಪ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಎಲ್.ಪಿ.ನಂಜಪ್ಪ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ಸಂಜೀವಪ್ಪ, ಕೆ.ಸಿ.ಮಂಜುನಾಥ್, ಪುರುಷೋತ್ತಮ್, ಕೋಡಿ ಮಾರನಹಳ್ಳಿ ದೇವರಾಜು, ರವೀಂದ್ರಬಾಬು, ನಾಗೇಂದ್ರಕುಮಾರ್ ಇದ್ದರು.
ಪಕ್ಷಾಂತರದ ಬಗ್ಗೆ ಜೆಡಿಎಸ್ ಎಚ್ಚರಗೊಂಡಿದ್ದು, ತನ್ನ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚದುರಿಹೋಗದಂತೆ ತಡೆಯುವ ಯತ್ನ ನಡೆಸಿದೆ.
ಕಾಂಗ್ರೆಸ್ ಮುಖಂಡ, ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಮಾಜಿ ಸಚಿವರಾದ ಎಚ್.ಡಿ.ರೇವಣ್ಣ ಹಾಗೂ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.