ಮಂಡ್ಯ: ವಾಟರ್ಮನ್, ಸ್ವೀಪರ್ಗಳಿಗೆ ಕೂಡಲೇ 20 ತಿಂಗಳ ವೇತನ ಜಮಾ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದ ಸದಸ್ಯರು ಗುರುವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್/ ಗುಮಾಸ್ತ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ/ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಆಯ್ಕೆ ಮೂಲಕ ನೇರ ನೇಮಕಾತಿಯ ಸರ್ಕಾರದ ಆದೇಶವನ್ನು ಹಿಂಪಡೆಯಬೇಕು. ಇಲ್ಲದೆ ಇದ್ದರೆ 20–25 ವರ್ಷಗಳಿಂದ ಸೇವೆ ಮಾಡಿ ನಿವೃತ್ತಿಯ ಅಂಚಿನಲ್ಲಿರುವ ಸಾವಿರಾರು ನೌಕರರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
15ನೇ ಹಣಕಾಸಿನಲ್ಲಿ ವಾಟರ್ ಮ್ಯಾನ್/ ಸ್ವೀಪರ್ಗಳಿಗೆ ವೇತನ ಪಾವತಿಸುವಂತೆ ಸರ್ಕಾರ ಆದೇಶ ಮಾಡಿದ್ದರೂ ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಯಾಗುತ್ತಿಲ್ಲ. 18–20 ತಿಂಗಳ ವೇತನ ಬಾಕಿ ಇದ್ದು, ಕೂಡಲೇ ಸಿಬ್ಬಂದಿ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು.
25–30ವರ್ಷ ಸೇವೆ ಸಲ್ಲಿಸಿದ್ದರೂ ಯಾವುದೇ ಸೇವಾ ನಿಯಮಾವಳಿಗಳಿಲ್ಲ. ಅನಾರೋಗ್ಯಕ್ಕೆ ತುತ್ತಾದರೆ, ಅಕಾಲಿಕ ಮರಣವಾದರೆ ಯಾವುದೇ ಸವಲತ್ತುಗಳಿರುವುದಿಲ್ಲ. ಆದೇಶಗಳಿದ್ದರೂ ಪಂಚಾಯಿತಿ ಅಧಿಕಾರಿಗಳು ಅದನ್ನು ಜಾರಿ ಮಾಡುತ್ತಿಲ್ಲ. ನಿವೃತ್ತಿಯಾದರೆ ಬರಿಗೈನಲ್ಲಿ ಕಳುಹಿಸಲಾಗುತ್ತಿದೆ. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವಾಗ ಗ್ರಾಮಪಂಚಾಯಿತಿ ಎಲ್ಲ ಸಿಬ್ಬಂದಿಯನ್ನು ಒಳಪಡಿಸಬೇಕು. ಗ್ರಾಮ ಪಂಚಾಯಿತಿಯಲ್ಲಿ ಅಕ್ಟೋಬರ್ 2017ರವರೆಗೆ ಕೆಲಸ ಮಾಡುತ್ತಿದ್ದ ಎಲ್ಲ ಸಿಬ್ಬಂದಿಯನ್ನು ಇಎಫ್ಎಂಎಸ್ಗೆ ಒಳಪಡಿಸಬೇಕು ಎಂಬ ಆದೇಶವಿದ್ದರೂ ಇನ್ನೂ ಸಾವಿರಾರು ಸಿಬ್ಬಂದಿಯನ್ನು ಸೇರಿಸಿಲ್ಲ. ಕೂಡಲೇ ಸಿಬ್ಬಂದಿಯನ್ನು ಇಎಫ್ಎಂಎಸ್ಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಎಂ.ಎಂ.ಶಿವಕುಮಾರ್, ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿ. ಕುಮಾರಿ, ಜಿ.ಆರ್.ರಾಮು, ರಮೇಶ್, ಮಂಜು, ಸಿದ್ದರಾಮು, ನಾಗೇಶ್, ಬಸವರಾಜು ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.