ಹಲಗೂರು (ಮಂಡ್ಯ ಜಿಲ್ಲೆ): ಇಲ್ಲಿಯ ಕಾವೇರಿ ವನ್ಯಜೀವಿ ವಲಯದಲ್ಲಿ ನಾಲ್ವರು ಶುಕ್ರವಾರ ನಸುಕಿನಲ್ಲಿ 2 ಜಿಂಕೆ ಬೇಟೆಯಾಡಿ ಕೊಂದು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಒಬ್ಬನನ್ನು ಬಂಧಿಸಿದ್ದು ಮೂವರು ಪರಾರಿಯಾಗಿದ್ದಾರೆ.
ವೆಂಕಟೇಶ್ ಗುಂಡೇಟಿನಿಂದ ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನು, ಶೇಖರ್, ತೀರ್ಥ ಕತ್ತಲಲ್ಲಿ ಪರಾರಿಯಾಗಿದ್ದಾರೆ.
ನಸುಕಿನ 3 ಗಂಟೆ ಸಮಯದಲ್ಲಿ ಆರೋಪಿಗಳು ನಾಡಬಂದೂಕಿನಿಂದ 2 ಜಿಂಕೆಯನ್ನು ಕೊಂದಿದ್ದಾರೆ. ಗುಂಡಿನ ಸದ್ದು ಅರಿತ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಪಾಳಿಯ ಗಸ್ತಿನಲ್ಲಿದ್ದ ವನ ಪಾಲಕರು ಆರೋಪಿಗಳನ್ನು ಸುತ್ತುವರಿದಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳ ಪ್ರತಿರೋಧ ವ್ಯಕ್ತಪಡಿಸಿ ಗುಂಡು ಹಾರಿಸಲು ಯತ್ನಿಸಿದ್ದಾರೆ.
ಅಪಾಯ ಅರಿತ ವನಪಾಲರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ವೆಂಕಟೇಶ್ ಸಿಕ್ಕಿಬಿದ್ದಿದ್ದಾನೆ. ಪರಾರಿಯಾದ ಮೂವರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.
ಸ್ಥಳಕ್ಕೆ ಎಸಿಎಫ್ ಅಂಕರಾಜು, ವಲಯ ಅರಣ್ಯಾಧಿಕಾರಿ ಮಹದೇವಸ್ವಾಮಿ, ಡಿವೈಎಸ್ಪಿ ಲಕ್ಷ್ಮಿ ನಾರಾಯಣ್ ಪ್ರಸಾದ್, ಸಬ್ ಇನ್ಸ್ಪೆಕ್ಟರ್ ಮಾರುತಿ ತಮ್ಮಣ್ಣವರ್ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.