ಸಂತೇಬಾಚಹಳ್ಳಿ: ‘ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳು ಮಾತ್ರ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂಬ ಸತ್ಯ ಅರಿತಿರುವುದರಿಂದ ಟೀಕೆಗಳಿಗೆ ಅಂಜದೆ ಜನಪರವಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಜನರ ಸೇವೆ ಮಾಡಲು ರಾಜಕಾರಣಕ್ಕೆ ಬಂದಿದ್ದೇನೆ’ ಎಂದು ಯುವಜನ ಸಬಲೀಕರಣ, ಕ್ರೀಡೆ ಮತ್ತು ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ತಾಲ್ಲೂಕಿನ ಸಾರಂಗಿ ಮತ್ತು ಸಂತೇಬಾಚಹಳ್ಳಿ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಆರಂಭಿಸಿದ ಘನ
ತ್ಯಾಜ್ಯ ಸಂಸ್ಕರಣಾ ಘಟಕ, ಪ್ರೌಢ
ಶಾಲಾ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ
ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ನಮ್ಮ ಕೊಡುಗೆಯಿದೆ. ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನನ್ನಾಗಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಜವಾಬ್ಧಾರಿ ನೀಡಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೋವಿಡ್ ಒಂದು ಮತ್ತು ಎರಡನೇ ಅಲೆಯಲ್ಲಿ ಜೀವದ ಹಂಗು ತೊರೆದು ಶಕ್ತಿಮೀರಿ ಕೆಲಸ ಮಾಡಿದ್ದೇನೆ. ಜಿಲ್ಲೆಯಲ್ಲಿ ಹತ್ತು ಹಲವು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿದ್ದೇನೆ ಎಂದರು.
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಆರಂಭವಾಗಿದೆ. ಮೈಷುಗರ್ ಸಕ್ಕರೆ ಕಾರ್ಖಾನೆಯೂ ಆರಂಭವಾಗಲಿದೆ. ಮಂಡ್ಯ ಜಿಲ್ಲಾ ಉಸ್ತುವಾರಿಯನ್ನು ಬದಲಿಸಿ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ನೀಡಿದ್ದಕ್ಕೆ ಬೇಸರವಾಗಿಲ್ಲ. ಪಕ್ಷವು ವಹಿಸಿರುವ ಹೊಸ ಜವಾಬ್ಧಾರಿಯನ್ನು
ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.
ಸಂತೇಬಾಚಹಳ್ಳಿ ಹೋಬಳಿಯ ಕೆರೆ ಕಟ್ಟೆಗಳನ್ನು ಹೇಮಾವತಿ ನದಿಯ ನೀರಿನಿಂದ ತುಂಬಿಸುವ ಮಾಜಿ ಸ್ಪೀಕರ್ ಕೃಷ್ಣ ಅವರ ಕನಸಿನ ಗೂಡೆಹೊಸಳ್ಳಿ ಏತ ನೀರಾವರಿ ಯೋಜನೆಯನ್ನು ₹218 ಕೋಟಿ ವೆಚ್ಚದಲ್ಲಿ ಮಂಜೂರು ಮಾಡಿಸಿ ಕಾಮಗಾರಿ ಆರಂಭಿಸಲಾಗಿದೆ. ಶೀಳನೆರೆ ಮತ್ತು ಬೂಕನಕೆರೆ ಹೋಬಳಿಯ ಕೆರೆಕಟ್ಟೆಗಳನ್ನು ತುಂಬಿಸುವ ಕಟ್ಟಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿಯು ₹265 ಕೋಟಿ ವೆಚ್ಚದಲ್ಲಿ ಮಂಜೂರಾಗಿದ್ದು, ಸದ್ಯದಲ್ಲೇ ಕೆಲಸ ಆರಂಭವಾಗಲಿದೆ ಎಂದರು.
ಕೆ.ಆರ್.ಪೇಟೆ ತಾಲ್ಲೂಕಿನ ಆರು ಹೋಬಳಿಗಳಲ್ಲೂ ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ, ಅಂಬೇಡ್ಕರ್ ಸೇರಿದಂತೆ ನವೋದಯ ಮಾದರಿಯ ಅಲ್ಪಸಂಖ್ಯಾತರ ವಸತಿಶಾಲೆಗಳನ್ನು ಮಂಜೂರು ಮಾಡಿಸಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇನೆ. ಶೀಳನೆರೆ ಹೋಬಳಿಯಲ್ಲಿ ಮತ್ತೊಂದು ವಸತಿ ಶಾಲೆ ಮಂಜೂರಾಗಿದ್ದು, ಸದ್ಯದಲ್ಲೇ ಭೂಮಿಪೂಜೆ ಮಾಡುತ್ತೇನೆ ಎಂದರು.
ಮೂಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್, ಸಾರಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ, ಸಂತೇಬಾಚಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್, ರಂಗನಾಥಪುರ ಕ್ರಾಸ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್, ಮುಖಂಡರಾದ ಬಿಲ್ಲೇನಹಳ್ಳಿ ಕುಮಾರ್, ಸಾರಂಗಿ ಮಂಜುನಾಥಗೌಡ, ಟಿಎಪಿಸಿಎಂಎಸ್ ಮಾಜಿಅಧ್ಯಕ್ಷ ಶ್ರೀಧರ್, ತಾಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಪ್ರಕಾಶ್, ತಹಶೀಲ್ದಾರ್ ಎಂ.ವಿ.ರೂಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧನಂಜಯ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹೇಶ್, ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು, ಬಿಸಿಎಂ ಅಧಿಕಾರಿ ವೆಂಕಟೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.