ಮದ್ದೂರು: ರೈತರ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡುವಂತೆ ಆಗ್ರಹಿಸಿ ತಾಲ್ಲೂಕಿನ ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಗ್ರಾಮಗಳ ಗ್ರಾಮಸ್ಥರು ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಚೇರಿ ಮುಂದೆ ಜಮಾಯಿಸಿದ ಗ್ರಾಮಸ್ಥರು, ಸಮರ್ಪಕವಾಗಿ ವಿದ್ಯುತ್ ನೀಡದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಗ್ರಾಮದ ಮುಖಂಡ ಕಾಂತರಾಜು ಮಾತನಾಡಿ, ‘ಹಲವು ದಿನದಿಂದ ವಿದ್ಯುತ್ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ನೀಡದ ಕಾರಣ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಬೆಳೆಗಳು ಒಣಗುವ ಪರಿಸ್ಥಿತಿ ಉಂಟಾಗಿದೆ. ಇದರಿಂದ, ಲಕ್ಷಾಂತರ ಮೌಲ್ಯದ ಬೆಲೆ ಬಾಳುವ ಬೆಳೆಗಳು ಕೈ ತಪ್ಪುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ಈ ಕೂಡಲೇ ರೈತರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿದ್ಯುತ್ ನೀಡಬೇಕು. ಇಲ್ಲದಿದ್ದರೆ ಸೆಸ್ಕ್ ಕಚೇರಿ ಮುಂದೆ ಉಗ್ರ ಹೋರಾಟ ರೂಪಿಸಲಾಗುವುದು’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಕಾರ್ಯಪಾಲಕ ಸಹಾಯಕ ಅಭಿಯಂತರ ರಮೇಶ್ ಆಗಮಿಸಿ ಪ್ರತಿಭಟನಾಕಾರರ ಜತೆ ಮಾತನಾಡಿ, ಮೂರು ದಿನಗಳಲ್ಲಿ ಸಮರ್ಪಕವಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಬಾಬು, ಸೋಮಶೇಖರ್, ರಾಮಲಿಂಗಯ್ಯ, ಸುಧೀರ್ಕುಮಾರ್, ರಾಜೇಶ್ ಸೇರಿದಂತೆ ಇತರರು ಹಾಜರಿದ್ದರು.