ಮದ್ದೂರು: ಕರ್ತವ್ಯಲೋಪ ಎಸಗಿದ ಆರೋಪದ ಮೇರೆಗೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ಪಿಎಸ್ಐ ಪ್ರಭಾ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಆದೇಶಿಸಿದ್ದಾರೆ.
ಕೆಲ ದಿನಗಳ ಹಿಂದೆ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ದುಂಡನಹಳ್ಳಿ ಬಳಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಲಾರಿಯೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಮುಚ್ಚಿ ಹಾಕಲು ಪಿಎಸ್ಐ ಪ್ರಭಾ ಸಹಕರಿಸಿದ್ದರು ಎಂಬ ದೂರು ಕೇಳಿಬಂದಿತ್ತು.
ಘಟನಾ ಸ್ಥಳಕ್ಕೆ ಪರಶುರಾಮ್ ಭೇಟಿ ನೀಡಿದ್ದ ವೇಳೆ, ‘ತಾಲ್ಲೂಕಿನಲ್ಲಿ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಪೊಲೀಸರು ಸಹಕಾರ ನೀಡುತ್ತಿದ್ದಾರೆ’ ಎಂದು ಸ್ಥಳೀಯರು ದೂರಿದ್ದರು. ಹೀಗಾಗಿ, ಕರ್ತವ್ಯ ಲೋಪದ ಆಧಾರದ ಮೇಲೆ ಪ್ರಭಾ ಅವರನ್ನು ಅಮಾನತು ಮಾಡಲಾಗಿದೆ.