ಮಂಡ್ಯ: ‘ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ್ ಬುಧವಾರ ತಿಳಿಸಿದರು.
‘ಲಾಕ್ಡೌನ್ ಬಗ್ಗೆ ನಮ್ಮ ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಾಗಿದೆ. ರಾಜ್ಯದಲ್ಲಿರುವ ಪರಿಸ್ಥಿತಿ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಹಲವು ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನೂ ಚರ್ಚಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
2 ತಿಂಗಳ ಪಿಂಚಣಿ: ‘ಒಂದೇ ಕಂತಿನಲ್ಲಿ 2 ತಿಂಗಳ ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಪ್ರೋತ್ಸಾಹ ಧನ ವಿತರಣೆ ಮಾಡಲು ಆದೇಶ ನೀಡಿದ್ದೇನೆ. ಒಂದೇ ಬಾರಿ 2 ತಿಂಗಳ ಹಣ ನೀಡಲು ಸಾಧ್ಯವಾಗುವಂತೆ ಕಂದಾಯ ಇಲಾಖೆಯ ಸಾಫ್ಟ್ವೇರ್ ಬದಲಾವಣೆ ಮಾಡಲಾಗಿದೆ’ ಎಂದು ಹೇಳಿದರು.
ಮತ್ತೊಬ್ಬನಿಗೆ ಕೋವಿಡ್ 19: ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ ಮಳವಳ್ಳಿಯ ಮತ್ತೊಬ್ಬ ವ್ಯಕ್ತಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು ಜಿಲ್ಲೆಯ ಸೋಂಕಿತರ ಸಂಖ್ಯೆ 4ಕ್ಕೇರಿದೆ.
ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದ 7 ಮಂದಿಯ ಗಂಟಲು ದ್ರವ, ರಕ್ತ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ಮೂವರಲ್ಲಿ ಕೋವಿಡ್ 19 ಪತ್ತೆಯಾಗಿತ್ತು. ಇಬ್ಬರ ವರದಿ ಸಮರ್ಪಕವಾಗಿ ಇರಲಿಲ್ಲವಾದ್ದರಿಂದ ಮತ್ತೊಮ್ಮೆ ಅವರ ಮಾದರಿಯನ್ನು ಕಳುಹಿಸಲಾಗಿತ್ತು. ಅವರಲ್ಲಿ ಒಬ್ಬರಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.