ಚನ್ನಪಟ್ಟಣ: ಮಹದೇಶ್ವರನಗರದ ಬಳಿಯ ಮಹದೇಶ್ವರ ಸ್ವಾಮಿ ದೇವಾಲಯದ ಬಳಿ ನಿವೃತ್ತ ರಿಸರ್ವ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕನಕಪುರ ತಾಲ್ಲೂಕಿನ ಎಚ್.ಕೊತ್ತನೂರು ಗ್ರಾಮದವರಾದ ಕೃಷ್ಣಪ್ಪ (68) ಆತ್ಮಹತ್ಯೆ ಮಾಡಿಕೊಂಡವರು. ಇವರು ತಾಲ್ಲೂಕಿನ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ತಮ್ಮ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು.
ಬೆಂಗಳೂರಿನಲ್ಲಿ ರಿಸರ್ವ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ದೇಗುಲದ ಮುಂಬದಿ ಇರುವ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಯೇ ಆತ್ಯಹತ್ಯೆಗೆ ಕಾರಣ ಎನ್ನಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.