ಮಂಡ್ಯ: ‘ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಯಡಿ ಮಂಡ್ಯ ಭಾಗದ ಆಲಮನೆಗಳಿಗೆ ಪುನಶ್ಚೇತನ ನೀಡಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಹಕಾರ ಇಲಾಖೆ ವತಿಯಿಂದ ಆಲೆಮನೆ ಮಾಲೀಕರಿಗೆ ಸಾಲಸೌಲಭ್ಯ ಒದಗಿಸಲಾಗುವುದು. ಸಾವಯವ ಬೆಲ್ಲ ತಯಾರಿಗೆ ಎಲ್ಲಾ ರೀತಿಯ ಉತ್ತೇಜನ ನೀಡಲಾಗುವುದು. ಆಲೆಮನೆಯಲ್ಲಿ ಬೆಲ್ಲ ತಯಾರಿಸುವ ಕೌಶಲಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದರು.
‘ಆಲೆಮನೆ ಮಾಲೀಕರು ಆಧುನಿಕ ಯಂತ್ರೋಪಕರಣ ಅಳವಡಿಸಿಕೊಳ್ಳಲು ಸರ್ಕಾರದ ವತಿಯಿಂದ ಸಹಾಯ ಒದಗಿಸಲಾಗುವುದು. ಆ ಮೂಲಕ ಕಬ್ಬು ಕ್ರಷರ್ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಈ ಕುರಿತು ಆಲೆಮನೆ ಮಾಲೀಕರೊಂದಿಗೆ ಸಭೆ ನಡೆಸಲಾಗುವುದು. ಅ.2ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.