ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2024ರಲ್ಲಿ ಮಂಡ್ಯದಲ್ಲೇ ನಡೆಯಲಿದೆ. ಈ ಬಗ್ಗೆ ಶೀಘ್ರದಲ್ಲೇ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.
ಸಾಹಿತ್ಯ ಸಮ್ಮೇಳನ ಆಯೋಜನೆ ಸಂಬಂಧ ನಗರದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಸಭೆಯ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ 2024ರಲ್ಲಿ ಯಾವಾಗ ಸಮ್ಮೇಳನ ನಡೆಸಬಹುದು. ಸಮ್ಮೇಳನದ ಸ್ವರೂಪ ಹೇಗಿರಬೇಕು ಎಂಬುದರ ಕುರಿತು ಸಾರ್ವಜನಿಕರು ಸಲಹೆ ನೀಡಿದ್ದಾರೆ. ಈ ಎಲ್ಲ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಸರ್ಕಾರದ ಮುಂದೆ ಇಡಲಾಗುವುದು’ ಎಂದರು.
‘ 2024ರ ಜನವರಿಯಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಬರ ಹಾಗೂ ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂಡಲಾಗಿದೆ ಅಷ್ಟೇ. ಮಂಡ್ಯದಿಂದ ಬೇರೊಂದು ಜಿಲ್ಲೆಗೆ ಸಮ್ಮೇಳನವನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ. ಇಲ್ಲಿಯೇ ಸಮ್ಮೇಳನ ನಡೆಯಲಿದೆ’ ಎಂದು ಸ್ಪಷ್ಟನೆ ನೀಡಿದರು