ಮಂಡ್ಯ: ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಒಂದು ವಾರದಿಂದ ತೆರೆದಿದ್ದು, ಸರ್ಕಾರದ ಆದೇಶದ ವಿರುದ್ಧವಾಗಿ ಪಾಠ ಪ್ರವಚನಗಳನ್ನು ನಡೆಸುತ್ತಿವೆ.
ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.
ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಶನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲೆಗಳು ತೆರೆದಿವೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ತರಗತಿಗಳು ನಡೆಯುತ್ತಿದೆ. ಕೆಲ ಶಾಲೆಗಳಲ್ಲಿ ಶಿಕ್ಷಕರು ಮಾಸ್ಕ್ ಧರಿಸುತ್ತಿಲ್ಲ.
ಶಾಲೆ ತೆರೆಯಲು ಅನುಮತಿ ಇಲ್ಲದಿದ್ದರೂ ಆಡಳಿತ ಮಂಡಳಿಯವರು ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಡಿಡಿಪಿಐ ರಘುನಂದನ್ ಪ್ರತಿಕ್ರಿಯಿಸಿ, ‘ಜಿಲ್ಲೆಯಲ್ಲಿ ಯಾರಿಗೂ ಶಾಲೆ ತೆರೆಯಲು ಅನುಮತಿ ನೀಡಿಲ್ಲ. ಯಾವ ಶಾಲೆಯಲ್ಲೂ ಪುನರ್ಮನನ ತರಗತಿಗಳು ನಡೆಯುತ್ತಿಲ್ಲ. ಮಕ್ಕಳು ಪ್ರವೇಶಪತ್ರ ತೆಗೆದುಕೊಳ್ಳಲು ಶಾಲೆಗೆ ಹೋಗುತ್ತಿದ್ದಾರೆ. ಶಾಲೆಗಳನ್ನು ತೆರೆದು ಪಾಠ ಮಾಡಿದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.